ಹೊಸ ದಿಗಂತ ವರದಿ, ಚಿತ್ರದುರ್ಗ:
ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್ಡಿಟಿ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯು ಪಿಸಿ&ಪಿಎನ್ಡಿಟಿ ತಂಡದೊಂದಿಗೆ ಹಿರಿಯೂರು ನಗರದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು.
ಪಿಸಿ & ಪಿಎನ್ಡಿಟಿ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ.ಸತ್ಯನಾರಾಯಣ ಹಿರಿಯೂರು ನಗರದ ಮುಖ್ಯರಸ್ತೆಯಲ್ಲಿರುವ ಬಾಲಾಜಿ ನರ್ಸಿಂಗ್ ಹೋಮ್ ಮತ್ತು ದಂತ ಚಿಕಿತ್ಸಾಲಯದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಿರುವ ದಾಖಲಾತಿ, ರಿಜಿಸ್ಟರ್ (ಎಎನ್ಸಿ) ಸರಿಯಾಗಿ ನಿರ್ವಹಿಸಲು ಸೂಚಿಸಿದರು.