ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂಪಾಯಿ ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿಲೋಮೀಟರ್ ದ್ವಿಪಥ ಅಭಿವೃದ್ಧಿ 613.65 ಕೋಟಿ ರೂಪಾಯಿ ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್ನಲ್ಲಿ 11.20 ಕಿ.ಮೀ. ಅಭಿವೃದ್ಧಿ 343.73 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು, ಟೆಂಡರ್ ಆಹ್ವಾನಿಸಿದೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ -ಮೈಸೂರು ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ಗೊತ್ತಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.