ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ (Bharat Jodo Nyay Yatra) ಲೋಗೋ ಮತ್ತು ಘೋಷವಾಕ್ಯವನ್ನು ಕಾಂಗ್ರೆಸ್ ಶನಿವಾರ ಅನಾವರಣಗೊಳಿಸಿದೆ.
ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ನಡೆದ ಅನಾವರಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.
“ನ್ಯಾಯ್ ಕಾ ಹಕ್ ಮಿಲ್ನೆ ತಕ್” (ನಮಗೆ ನ್ಯಾಯ ಸಿಗುವವರೆಗೆ) ಎಂಬುದು ಯಾತ್ರೆಯ ಘೋಷವಾಕ್ಯವಾಗಿದೆ. ನಾವು ಜನವರಿ 14 ರಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದೇವೆ. ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ದೇಶದ ಜನರಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಒದಗಿಸುವ ನಮ್ಮ ಬಲವಾದ ಹೆಜ್ಜೆಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಜನಾಂಗೀಯ ಹಿಂಸಾಚಾರ ಕಂಡ ಮಣಿಪುರಕ್ಕೆ ಅವರು ಭೇಟಿ ನೀಡಿಲ್ಲ. ಬೇರೆ ದಾರಿಯಿಲ್ಲ ಎಂದು ಜನರ ಮಧ್ಯೆ ಹೋಗುತ್ತಿದ್ದೇವೆ. ಸಂಸತ್ತಿನಲ್ಲಿ ಮಾತನಾಡಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ಪ್ರಯತ್ನಿಸಿದೆವು. ಆದರೆ ಸರ್ಕಾರ ನಮಗೆ ಅವಕಾಶ ನೀಡಲಿಲ್ಲ. ಇತಿಹಾಸದಲ್ಲಿ ಮೊದಲ ಬಾರಿಗೆ 146 ಸಂಸದರನ್ನು ಅಮಾನತುಗೊಳಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಜನವರಿ 14 ರಂದು ಇಂಫಾಲ್ನಿಂದ ಪ್ರಾರಂಭವಾಗಲಿದೆ. 6,713 ಕಿಲೋಮೀಟರ್ಗಳನ್ನು ಕ್ರಮಿಸಲಿದೆ. 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ವ್ಯಾಪಿಸಿ 110 ಜಿಲ್ಲೆಗಳನ್ನು ಒಳಗೊಂಡಿದೆ. ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮೆರವಣಿಗೆ ಮುಕ್ತಾಯಗೊಳ್ಳಲಿದೆ.