Friday, January 2, 2026

ಹಿಮಾಚಲ ಪ್ರದೇಶದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಕೇಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಕಾಲೇಜು ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯದ ನಂತರ ಸಾವನ್ನಪ್ಪಿದ್ದು, ಈ ಸಂಬಂಧ ಪ್ರೊಫೆಸರ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೃತ ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಾಧ್ಯಾಪಕ ಮತ್ತು ಇತರ ಮೂವರ ವಿರುದ್ಧ ರ‍್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಕೇಸ್ ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಮೃತ ಯುವತಿ ಕಾಲೇಜಿನಲ್ಲಿ ಎರಡನೇ ವರ್ಷದ ಡಿಗ್ರಿ ವಿದ್ಯಾರ್ಥಿನಿಯಾಗಿದ್ದಳು. ಸೆಪ್ಟೆಂಬರ್ 18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಆಕೆಯನ್ನು ಥಳಿಸಿ ಬೆದರಿಕೆ ಹಾಕಿದ್ದರು. ಇದರಿಂದಾಗಿ ಆಕೆ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು ಎಂದು ಆರೋಪಿಸಲಾಗಿದೆ. ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡಿಸೆಂಬರ್ 26ರಂದು ಲುಧಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಯುವತಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮೃತ ವಿದ್ಯಾರ್ಥಿನಿಯ ತಂದೆ ತಮ್ಮ ದೂರಿನಲ್ಲಿ ಮೂವರು ಹಿರಿಯ ವಿದ್ಯಾರ್ಥಿಗಳಾದ ಹರ್ಷಿತಾ, ಆಕೃತಿ ಮತ್ತು ಕೊಮೊಲಿಕಾ ಅವರು ಸೆಪ್ಟೆಂಬರ್ 18, 2025ರಂದು ತಮ್ಮ ಮಗಳನ್ನು ಥಳಿಸಿದ್ದರು. ಆ ಕಾಲೇಜು ಪ್ರಾಧ್ಯಾಪಕ ಅಶೋಕ್ ಕುಮಾರ್ ಅವರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಬಳಿಕ ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ಸಮಯದಲ್ಲಿ ಆಕೆ ಸಾವನ್ನಪ್ಪಿದರು.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತ ವಿದ್ಯಾರ್ಥಿನಿ 2024ರಲ್ಲಿ ಕಾಲೇಜಿಗೆ ದಾಖಲಾಗಿದ್ದಳು. ಆಕೆ ಕೆಲವು ವಿದ್ಯಾರ್ಥಿಗಳಿಂದ ರ‍್ಯಾಕಿಂಗ್‌ಗೆ ಒಳಗಾಗಿದ್ದಳು. ಆಕೆ ಬಿಎ ಮೊದಲ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಳು ಎಂದು ಬೆಳಕಿಗೆ ಬಂದಿದೆ. ಇದರಿಂದಾಗಿ ಆಗಸ್ಟ್ 21, 2025ರಂದು ಅವಳ ಹೆಸರನ್ನು ಕಾಲೇಜು ಲಿಸ್ಟ್​​ನಿಂದ ತೆಗೆದುಹಾಕಲಾಯಿತು. ಅವಳು ಸೆಪ್ಟೆಂಬರ್‌ನಲ್ಲಿ ಮತ್ತೆ ಪ್ರವೇಶ ಕೋರಿ ಕಾಲೇಜಿಗೆ ಭೇಟಿ ನೀಡಿದ್ದಳು. ಆಗ ಆಕೆ ಮರುಮೌಲ್ಯಮಾಪನದಲ್ಲಿ ಉತ್ತೀರ್ಣಳಾದರೆ ಮಾತ್ರ ಎರಡನೇ ವರ್ಷಕ್ಕೆ ಸೇರಿಸಿಕೊಳ್ಳಲಾಗುವುದು ಮತ್ತು ವಿಫಲವಾದರೆ ಅವಳು ಮೊದಲ ವರ್ಷಕ್ಕೆ ಮರು ದಾಖಲಾಗಬೇಕಾಗುತ್ತದೆ ಎಂದು ತಿಳಿಸಲಾಯಿತು.

error: Content is protected !!