ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಹಿನ್ನೆಲೆ ಬಿಸಿಸಿಐ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ ಫ್ರಾಂಚೈಸಿಗೆ ಸೂಚಿಸಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಸಾಮಾಜಿಕ ಒತ್ತಡಗಳ ನಡುವೆಯೇ ಈ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಕೆಕೆಆರ್ ಮುಸ್ತಾಫಿಜುರ್ ಅವರನ್ನು ಬಿಡುಗಡೆ ಮಾಡಿದರೆ, ಫ್ರಾಂಚೈಸಿಯಿಂದ ಬರುವ ಯಾವುದೇ ಅಧಿಕೃತ ಮನವಿಯನ್ನು ಪರಿಗಣಿಸಿ ಬದಲಿ ಆಟಗಾರನ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಬಿಸಿಸಿಐ ಮತ್ತು ಐಪಿಎಲ್ ಫ್ರಾಂಚೈಸಿಗಳ ನಡುವೆ ನಿರಂತರ ಸಂವಾದ ನಡೆಯುತ್ತಿದೆ ಎಂಬುದನ್ನೂ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: FOOD | ಲಂಚ್ಗೆ ಸೂಪರ್ ಸ್ಪೆಷಲ್ ಡಿಶ್: ಆಂಧ್ರ ಸ್ಟೈಲ್ ಚಿಕನ್ ಕರಿ
ಹಸೀನಾ ಸರ್ಕಾರ ಪತನದ ಬಳಿಕ ಭಾರತ–ಬಾಂಗ್ಲಾದೇಶ ಸಂಬಂಧಗಳಲ್ಲಿ ಬಿರುಕು ಮೂಡಿರುವುದು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಆರೋಪಗಳು ಹಾಗೂ ಅದರ ಪ್ರತಿಫಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಉಂಟಾದ ಆಕ್ರೋಶ ಈ ನಿರ್ಧಾರಕ್ಕೆ ಹಿನ್ನೆಲೆ ಎನ್ನಲಾಗಿದೆ.
ಡಿಸೆಂಬರ್ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಕೆಕೆಆರ್ ಮುಸ್ತಾಫಿಜುರ್ ಅವರನ್ನು 9.20 ಕೋಟಿ ರೂ.ಗೆ ಖರೀದಿಸಿತ್ತು. ಇದರಿಂದ ಅವರು ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ಬಾಂಗ್ಲಾದೇಶ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು.
ಈಗ ಬಿಸಿಸಿಐ ಸೂಚನೆ ಹಿನ್ನೆಲೆಯಲ್ಲಿ ಕೆಕೆಆರ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಮೇಲೆ ಐಪಿಎಲ್ ವಲಯದ ಗಮನ ಕೇಂದ್ರೀಕೃತವಾಗಿದೆ.

