ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ನಿವೃತ್ತ ಐಎಎಸ್ ಅಧಿಕಾರಿ, ಬಿಜೆಪಿ ಮುಖಂಡ ಕೆ. ಶಿವರಾಮ್ (70) ವಿಧಿವಶರಾಗಿದ್ದಾರೆ.
ಬುಧವಾರ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹಸ್ಥಿತಿ ಗಂಭೀರವಾಗಿದ್ದ ಕಾರಣ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗುರುವಾರ ಅವರ ಆರೋಗ್ಯ ಇನ್ನಷ್ಟು ಬಿಗಡಾಯಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಶಿವರಾಮ್ ನಿಧನಕ್ಕೆ ರಾಜಕೀಯ ಗಣ್ಯರು, ಸಿನಿಮಾ ನಟರು ಶಿವರಾಮ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸ್ವಗೃಹದಲ್ಲಿ ಅಂತಿಮ ದರುಶನಕ್ಕೆ ಏರ್ಪಾಡು
ಮೋದಿ ರಸ್ತೆಯ ಸ್ವಗೃಹದಲ್ಲಿ ಕೆ. ಶಿವರಾಮ್ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕನ್ನಡದಲ್ಲೇ ಐಎಎಸ್ ಬರೆದಿದ್ದರು!
ಶಿವರಾಮ್, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು, ಈ ಮೂಲಕ ಕನ್ನಡದಲ್ಲಿಯೇ ಐಎಎಸ್ ಬರೆದು ಅಧಿಕಾರಿಯಾದ ಮೊದಲಿಗರು ಎಂಬ ಹೆಮ್ಮೆಗೆ ಪಾತ್ರರಾಗಿದ್ದರು.
ಹಲವು ವರ್ಷಗಳ ಸೇವೆ ನಂತರ ಚಿತ್ರರಂಗಕ್ಕೆ ಕಾಲಿಟ್ಟ ಅವರು, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ಮೂಲಕ ಖ್ಯಾತಿ ಪಡೆದಿದ್ದರು. ನಂತರ ಸಾಂಗ್ಲಿಯಾನ, ವಸಂತ ಕಾವ್ಯ, ಖಳನಾಯಕ ಇನ್ನಿತರ ಸಿನಿಮಾಗಳಲ್ಲಿಯೂ ನಟಿಸಿದ್ದರು.
2013 ರಲ್ಲಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಕಾಂಗ್ರೆಸ್ನೊಂದಿಗೆ ರಾಜಕೀಯ ಪಯಣ ಆರಂಭಿಸಿದ್ದರು. ನಂತರ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಶಿವರಾಮ್ ಛಲವಾದಿ ಮಹಾಸಭಾ ಅಧ್ಯಕ್ಷರೂ ಆಗಿದ್ದರು.