ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟದಿಂದಾಗಿ ರಾಜಧಾನಿಯ ಮಂದಿ ಆತಂಕದಲ್ಲಿದ್ದು, ಈ ಕಹಿ ಘಟನೆ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಇಂದು (ಮಾ.05) ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಗೃಹಸಚಿವರು ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಇ ಮೇಲ್ ಮೂಲಕ ಬೆದರಿಕೆ ಸಂದೇಶವೊಂದು ಬಂದಿದೆ. 2.5 ಮಿಲಿಯನ್ ಡಾಲರ್ ಕೊಡಲಿಲ್ಲ ಅಂದರೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ರೀತಿಯಲ್ಲೇ ನಗರದ ಬಸ್ಗಳು, ಬಸ್ ಹಾಗೂ ರೈಲು ನಿಲ್ದಾಣಗಳನ್ನು ಸ್ಪೋಟಿಸುವುದಾಗಿ ಇ ಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ.
10786progongmail.com ಎನ್ನುವ ಇ ಮೇಲ್ ಐಡಿಯಿಂದ ಬೆದರಿಕೆ ಮೆಸೇಜ್ ಬಂದಿದೆ. ರಾಮೇಶ್ವರಂ ಕೆಫೆ ಪ್ರಕರಣ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ನಗರದ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ. ಇಮೇಲ್ ಸಂದೇಶದ ಮೂಲವನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ.