ಹೊಸದಿಗಂತ ವರದಿ, ಮೈಸೂರು:
ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ಶಿಬಿರದಲ್ಲಿ ನಡೆದಿದೆ. ಶಿಬಿರದಲ್ಲಿದ್ದ ವಿರಾಟ್ ಎಂಬ ಸಾಕಾನೆ ಅನಾರೋಗ್ಯದಿಂದ ಸಾವನ್ನಪ್ಪಿದೆ.
ವೀರನಹೊಸಹಳ್ಳಿ ವನ್ಯಜೀವಿ ವಲಯದಿಂದ ೨೦೨೩ರ ನವೆಂಬರ್ ೪ ರಂದು ಈ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಅದಕ್ಕೆ ವಿರಾಟ್ ಎಂದು ಹೆಸರಿಡಲಾಗಿತ್ತು. ತುಂಬಾ ದಿನಗಳಿಂದ ತೀವ್ರ ಅನಾರೋಗ್ಯದಿಂದ ವಿರಾಟ್ ಆನೆ ಬಳಲುತ್ತಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಂತರ ಸಾಕಾನೆಯನ್ನು ಹೂಳುವ ಮುಖಾಂತರ ಶವ ಸಂಸ್ಕಾರ ನೆರವೇರಿಸಲಾಯಿತು.