ಹೊಸದಿಗಂತ ವರದಿ, ಮಂಗಳೂರು:
ಕೇರಳ ಸರ್ಕಾರ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸಿರುವುದರಿಂದ ಅಲ್ಲಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಮೇಲೆ ಹೊಡೆತ ಬೀಳಲಿದೆ. ಇದು ಜಾರಿಯಾಗಲು ಬಿಡುವುದಿಲ್ಲ. ರಾಜ್ಯಪಾಲರು ಈ ಮಸೂದೆಗೆ ಸಹಿ ಹಾಕಿದರೆ ಕಾನೂನು ಹೋರಾಟ ಅನಿವಾರ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಿದ ಮಂಗಲೂರು ಹೊರವಲಯದ ಪಿಲಿಕುಳ ರೆಸಾರ್ಟ್ನ್ನು ಶನಿವಾರ ಸಂಜೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಲಾತ್ಕಾರವಾಗಿ ಭಾಷಾ ಅಲ್ಪಸಂಖ್ಯಾತರ ಮೇಲೆ ಮಲಯಾಳಂ ಭಾಷೆಯನ್ನು ಹೇರುವುದು ಸರಿಯಲ್ಲ. ಕಾನೂನು ಪ್ರಕಾರವೂ ಅದು ತಪ್ಪು. ಕೇರಳ ಸರ್ಕಾರ ವಿಧಾನಸಭೆಯಲ್ಲಿ ಅಂಗೀಕರಿಸಿ ಮಲಯಾಳಂ ಭಾಷಾ ಮಸೂದೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗುವುದು ಎಂದು ಸಿಎಂ ಹೇಳಿದರು.

