ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ವಿಚಾರವಾಗಿ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿರುವ ಸಿಎಂ ಸಿದ್ದರಾಮಯ್ಯ ಜಮೀನು ದಾಖಲೆ ಬಿಡುಗಡೆ ಮಾಡಿದ್ದಾರೆ.
ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ ನೀಡಲಾಗಿತ್ತು ಎಂದು ಹೇಳಿದ್ದು, ಮುಡಾ ಸೈಟ್ ಹಂಚಿಕೆ ದಾಖಲೆಯನ್ನು ಕಾಂಗ್ರೆಸ್ ನಾಯಕರು ಇದೇ ವೇಳೆ ಬಿಡುಗಡೆ ಮಾಡಿದರು.
ಆಸ್ತಿಯನ್ನು ಸರಕಾರ ದಲಿತ ಕುಟುಂಬಕ್ಕೆ ಮಂಜೂರು ಮಾಡಿಲ್ಲ. ಕುಟುಂಬವು ಸರ್ಕಾರದಿಂದ ಹರಾಜಿನಲ್ಲಿ ಭೂಮಿಯನ್ನು ಖರೀದಿಸಿದೆ ಮತ್ತು ಆದ್ದರಿಂದ ಈ ಪ್ರಕರಣದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯ ನಿಬಂಧನೆಯು ಅನ್ವಯಿಸುವುದಿಲ್ಲ. ಈ ವಿಚಾರದಲ್ಲಿ ವಿಪಕ್ಷಗಳು ಅನಗತ್ಯ ಆರೋಪ ಮಾಡಲು ಯತ್ನಿಸುತ್ತಿವೆ ಎಂದು ಆರೋಪಿಸಿದರು.
ರಾಜ್ಯ ಸರಕಾರ ಹಾಗೂ ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕು, ಕಪ್ಪು ಚುಕ್ಕೆ ತರಬೇಕು ಅಂತ ಇಡೀ ಸದನ ಹಾಳು ಮಾಡಿದರು. 1983ರಲ್ಲಿ ನಾನು ಶಾಸಕನಾದವನು, 84ರಲ್ಲಿ ಮಂತ್ರಿಯಾದವನು. ಶಾಸಕ, ಮಂತ್ರಿ, ಉಪಮುಖ್ಯಮಂತ್ರಿ, ಸಿಎಂ ಆಗಿ ನಲವತ್ತು ವರ್ಷಗಳ ಕಾಲ ರಾಜಕೀಯವಾಗಿ ಇದ್ದೇನೆ. ಇವತ್ತಿನವರೆಗೆ ಒಂದೂ ಕಪ್ಪು ಚುಕ್ಕೆ ಇಲ್ಲ.
ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಬಿಜೆಪಿ- ಜೆಡಿಎಸ್ ದ್ವೇಷದ ರಾಜಕಾರಣ ಮಾಡ್ತಾ ಇವೆ. ಅವರು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಸೇರಿದರೂ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಚುನಾವಣೆಯಲ್ಲಿ ನಮಗೆ ಮೊದಲಿಗಿಂತ 13 ಪರ್ಸೆಂಟ್ ಹೆಚ್ಚು ಮತ ಬಂದಿದೆ. 2019ರಲ್ಲಿ ಒಂದು ಸ್ಥಾನ ಗೆದ್ದಿದ್ದೆವು, ಈ ಬಾರಿ 9 ಸ್ಥಾನ ಗೆದ್ದಿದ್ದೇವೆ. ಇದರಿಂದ ಹತಾಶರಾಗಿ ಅವರು ವಾಮಮಾರ್ಗ ಹುಡುಕಿದ್ದಾರೆ.