ಹೊಸದಿಗಂತ ವರದಿ,ಮಂಗಳೂರು:
ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಭೂ ಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಹಲವು ವಾಹನಗಳು ಸಿಕ್ಕಿ ಹಾಕಿಕೊಂಡಿದೆ.
ಶಿರಾಡಿ ಘಾಟ್ ಪರಿಸರದಲ್ಲಿ ಪದೇ ಪದೇ ಭೂ ಕುಸಿತವಾಗುವ ಸ್ಥಳದಲ್ಲಿ ಭಾರೀ ಪ್ರಮಾಣದ ಕೆಸರು ನೀರು ಹೆದ್ದಾರಿಗೆ ಹರಿದು ಬರುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಗುತ್ತಿದೆ.
ಇದರ ನಡುವೆ ಕೆಸರು ಮಣ್ಣನ್ನು ತೆರವುಗೊಳಿಸುತ್ತಲೇ ಒಂದೊಂದಾಗಿ ವಾಹನಗಳನ್ನು ಬಿಡುವ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಚಾರ್ಮಾಡಿ ಘಾಟಿಯಲ್ಲೂ ಘನ ವಾಹನಗಳ ಸಂಚಾರ ಮಾತ್ರ ನಿರ್ಬಂಧಿಸಲಾಗಿದ್ದು, ಉಳಿದ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಸಂಪಾಜೆ ಘಾಟಿಯೂ ವಾಹನಗಳ ಸಂಚಾರಕ್ಕೆ ತೆರೆದಿರುವುದರಿಂದ ದ.ಕ. ಜಿಲ್ಲೆಯಿಂದ ಬೆಂಗಳೂರು ಕಡೆಗೆ ತೆರಳುವವರಿಗೆ ಯಾವುದೇ ಸಂಚಾರದ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ.