ಹೊಸದಿಗಂತ ವರದಿ,ಮಡಿಕೇರಿ:
ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳ ‘ಕರಗ’ಗಳಿಗೆ ಗುರುವಾರ ಸಂಜೆ ಇಲ್ಲಿನ ಪಂಪಿನ ಕೆರೆಯ ಬಳಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವುದರೊಂದಿಗೆ ಮಡಿಕೇರಿ ದಸರಾ ಜನೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರಕಿತು.
ಮಡಿಕೇರಿ ನಗರ ದಸರಾ ಸಮಿತಿ, ದಸರಾ ಉಪ ಸಮಿತಿಗಳು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ಸಾರ್ವಜನಿಕ ಪ್ರಮುಖರು, ಜನಪ್ರತಿನಿಧಿಗಳು, ಅಧಿಕಾರಿಗಳು ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ಸಂಜೆ ಪೂಜೆ ಸಲ್ಲಿಸಿ, ನಾಡಿನ ಒಳಿತಿಗೆ ಪ್ರಾರ್ಥಿಸುವ ಮೂಲಕ ಕರಗ ಮೆರವಣಿಗೆ ಆರಂಭಗೊಡಿತು.
ನವರಾತ್ರಿ ಉತ್ಸವದ ಆರಂಭದ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ ನಾಲ್ಕು ಶಕ್ತಿದೇವತೆಗಳ ದೇವಸ್ಥಾನಗಳಿಂದ ವ್ರತಧಾರಿಗಳೊಂದಿಗೆ ದೇವಾಲಯ ಸಮಿತಿಯವರು ಮಂಗಳವಾದ್ಯ ಸಹಿತ ಕರಗ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಹೊತ್ತು ಮೆರವಣಿಗೆಯ ಮೂಲಕ ಪಂಪಿನಕೆರೆಗೆ ತೆರಳಿದರು. ಬಳಿಕ ಅಗತ್ಯ ಪೂಜಾ ವಿಧಿ-ವಿಧಾನಗಳೊಂದಿಗೆ ಅತ್ಯಾಕರ್ಷಕವಾಗಿ ಕರಗಗಳನ್ನು ಕಟ್ಟಿ ಹೂವುಗಳಿಂದ ಅಲಂಕರಿಸಿ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು.
ಪಂಪಿನ ಕೆರೆ ಆವರಣದಿಂದ ಸಂಜೆ 6.45 ಗಂಟೆ ಸುಮಾರಿಗೆ ಹೊರ ಬಂದ ನಾಲ್ಕು ಕರಗಗಳ ಮೆರವಣಿಗೆಗೆ ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಈಡುಗಾಯಿ ಒಡೆಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಶಾಸಕ ಡಾ. ಮಂಥರ್ ಗೌಡ, ದಸರಾ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ಐಶ್ವರ್ಯ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆಕೆಪಿಸಿಸಿ ಮುಖಂಡರಾದ ಚಂದ್ರಮೌಳಿ, ಟಿ.ಪಿ.ರಮೇಶ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪೌರಾಯುಕ್ತ ರಮೇಶ್, ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು ಕರಗಗಳಿಗೆ ಪ್ರಥಮ ಪೂಜೆ ಸಲ್ಲಿಸಿದರು.
ಐತಿಹಾಸಿಕ ಮತ್ತು ಪೌರಾಣಿಕ ಹಿನ್ನೆಲೆಯನ್ನು ಒಳಗೊಂಡ ನಗರದ ರಾಜಾಸೀಟು ಬಳಿಯ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ಕರಗವನ್ನು ವ್ರತಧಾರಿ ಪಿ.ಪಿ.ಚಾಮಿ ಹೊರುತ್ತಿದ್ದು, ದಂಡಿನ ಮಾರಿಯಮ್ಮ ಕರಗವನ್ನು ಮಾಜಿ ಸೈನಿಕ ಜಿ.ಎ.ಉಮೇಶ್, ಕೋಟೆ ಮಾರಿಯಮ್ಮ ಕರಗವನ್ನು ಪಿ.ಬಿ.ಅನೀಶ್ಕುಮಾರ್, ಕಂಚಿ ಕಾಮಾಕ್ಷಿಯಮ್ಮ ದೇಗುಲದ ಕರಗವನ್ನು ಪಿ.ಸಿ.ಉಮೇಶ್ ಅವರು ಹೊರುವ ಮೂಲಕ ನಗರ ಮೆರವಣಿಗೆಯನ್ನು ಆರಂಭಿಸಿದರು.
ನಗರ ಪ್ರದಕ್ಷಿಣೆ: ಪಂಪಿನಕೆರೆ ಬಳಿಯಿಂದ ಹೊರಟ ನಾಲ್ಕು ಕರಗಗಳು ಮಹದೇವಪೇಟೆಯ ಬಸವೇಶ್ವರ ದೇವಾಲಯ, ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿದ ಬಳಿಕ ಸಂಪ್ರದಾಯದಂತೆ ಪೇಟೆ ಶ್ರೀ ರಾಮಮಂದಿರ ತಲುಪಿ, ಅಲ್ಲಿಯೂ ಕರಗಗಳಿಗೆ ಪೂಜೆ ಸಲ್ಲಿಸಿದ ನಂತರ ತಮ್ಮ ತಮ್ಮ ದೇವಾಲಯಗಳಿಗೆ ತೆರಳಿದವು. ಶುಕ್ರವಾರದಿಂದ ಕರಗಗಳು ನಗರ ಪ್ರದಕ್ಷಿಣೆ ಆರಂಭಿಸಲಿವೆ.