ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ: ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆ ಬೆಳಿಗ್ಗೆ ಕೊಂಚ ಬಿಡುವು ಪಡೆದಿತ್ತು. ಮಧ್ಯಾಹ್ನ ಮೂರು ಗಂಟೆ ಬಳಿಕ ರಾಜಧಾನಿಯಲ್ಲಿ ಮತ್ತೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆ ರಸ್ತೆಗಳು ಜಲಾವೃತಗೊಂಡಿವೆ. ಮಳೆ ಅವಾಂತರ, ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಕಚೇರಿಗಳಿಂದ ಮನೆಗಳಿಗೆ ವಾಪಾಸ್ ಆಗುತ್ತಿದ್ದವರು ಹೈರಾಣಾಗಿದ್ದಾರೆ.

ವಿಧಾನಸೌಧ, ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಆರ್.ಆರ್.ನಗರ, ನಾಯಂಡಹಳ್ಳಿ, ಗಿರಿನಗರ, ಹೊಸಕೆರೆಹಳ್ಳಿ, ಮೈಸೂರು ರಸ್ತೆ, ಕೆಂಗೇರಿ, ವಿಜಯನಗರ, ರಾಜಾಜಿನಗರ, ದೀಪಾಂಜಲಿ ನಗರ, ಶಾಂತಿನಗರ, ಲಾಲ್ ಬಾಗ್, ರಿಚ್ ಮಂಡ್ ಸರ್ಕಲ್ ಸೇರಿದಂತೆ ಹಲವೆಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

ವರುಣಾರ್ಭಟಕ್ಕೆ ಮತ್ತೆ ರಸ್ತೆಗಳು ತುಂಬಿ ಹರಿಯುತ್ತಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ವಿವಿಧೆಡೆ ವಿದ್ಯುತ್ ಸ್ಥಗಿತಗೊಂಡಿದೆ. ಇನ್ನು ಕೆಲವೆಡೆ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!