ಹೊಸದಿಗಂತ ವರದಿ, ನಾಗಮಂಗಲ :
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕನ ದೇಹದ ಅಂಗಾಂಗಗಳನ್ನು ಆಸ್ಪತ್ರೆಗೆ ದಾನ ಮಾಡಿರುವ ಪೋಷಕರು ಮಗನ ಸಾವಿನ ದುಃಖದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಬೆಳ್ಳೂರಿನ ಮಾರುತಿಪುರ ಸಮೀಪ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿ ನಾಯಕನಕೊಪ್ಪಲು ಗ್ರಾಮದ ವೆಂಕಟಲಕ್ಷ್ಮಮ್ಮ ಮತ್ತು ರಾಜಣ್ಣ ದಂಪತಿಯ ಪುತ್ರ ನಟರಾಜ್(28) ಗಂಭೀರವಾಗಿ ಗಾಯಗೊಂಡು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಟರಾಜ್ ಕೊನೆಯುಸಿರೆಳೆದಿದ್ದರು.
ಕುಟುಂಬಕ್ಕೆ ಆಧಾರವಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡಿರುವ ಮೃತ ನಟರಾಜ್ ಪೋಷಕರು ತಮ್ಮ ಮಗನ ಸಾವಿನ ದುಃಖದ ನಡುವೆಯೂ ಆತನ ಕಣ್ಣು, ಕಿಡ್ನಿ ಸೇರಿದಂತೆ ದೇಹದ ಕೆಲ ಅಂಗಾಂಗಗಳನ್ನು ಆಸ್ಪತ್ರೆಗೆ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ನಟರಾಜ್ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.