ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ವೇಗ ನೀಡಿರುವ ನಡುವೆಯೇ, ಕಾಂಗ್ರೆಸ್ ಪಕ್ಷದ ಒಳಗಿನ ಭಿನ್ನಮತಗಳು ಮತ್ತೆ ಬಹಿರಂಗವಾಗಿವೆ. ತಿರುವನಂತಪುರಂ ಸಂಸದ ಶಶಿ ತರೂರ್ ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ದೆಹಲಿಯಲ್ಲಿ ಕರೆದಿದ್ದ ಮಹತ್ವದ ಸಭೆಗೆ ಗೈರಾಗಿದ್ದರೆ.
ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯುತ್ತಿದ್ದರೂ, ತರೂರ್ ತಮ್ಮ ಸ್ವಕ್ಷೇತ್ರದಲ್ಲೇ ಉಳಿದಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಪ್ರಧಾನಿ ಮೋದಿ ತಿರುವನಂತಪುರಂಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತರೂರ್ ಅಲ್ಲೇ ಉಳಿಯಲು ನಿರ್ಧರಿಸಿದ್ದರು. ಮೋದಿ ರ್ಯಾಲಿಯಲ್ಲಿ ತರೂರ್ ಭಾಗವಹಿಸಬಹುದು ಎಂಬ ಊಹಾಪೋಹಗಳು ಹರಡಿದ್ದರೂ, ಅವರು ಅಂತಿಮವಾಗಿ ವೇದಿಕೆ ಹಂಚಿಕೊಂಡಿಲ್ಲ.
ಇತ್ತೀಚೆಗೆ ರಾಹುಲ್ ಗಾಂಧಿ ಕೊಚ್ಚಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತರೂರ್ಗೆ ಅಗತ್ಯ ಗೌರವ ನೀಡಲಾಗಲಿಲ್ಲ ಎಂಬ ಅಸಮಾಧಾನವೂ ಈ ಅಂತರಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಭಾಷಣವನ್ನು ಶೀಘ್ರ ಮುಗಿಸುವಂತೆ ಸೂಚನೆ ನೀಡಲಾಗಿದ್ದರಿಂದ ತರೂರ್ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ, ಎಡಪಕ್ಷಗಳ ಹಿಡಿತದಲ್ಲಿದ್ದ ತಿರುವನಂತಪುರಂ ಕಾರ್ಪೊರೇಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದನ್ನು ತರೂರ್ ಮೆಚ್ಚಿಕೊಂಡಿದ್ದು, ಪಕ್ಷದೊಳಗೆ ಅಸಮಾಧಾನ ಹುಟ್ಟಿಸಿತ್ತು. ಈ ಎಲ್ಲ ಬೆಳವಣಿಗೆಗಳು ಕೇರಳ ಕಾಂಗ್ರೆಸ್ನಲ್ಲಿ ಒಳಜಗಳ ತೀವ್ರಗೊಳ್ಳುತ್ತಿರುವುದನ್ನು ಸೂಚಿಸುತ್ತಿವೆ.


