ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡುಗೆ ಸಿಲೆಂಡರ್ ಸ್ಪೋಟ ಗೊಂಡ ಹಿನ್ನೆಲೆ 9 ಜನ ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡ ಘಟನೆ ತಡರಾತ್ರಿ ಇಲ್ಲಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ನಡೆದಿದೆ.
ರಾಜು ಹರ್ಲಾಪುರ(21), ಸಂಜಯ ಸವದತ್ತಿ(20), ವಿನಾಯಕ ಬಾತಕೇರ(12), ಪ್ರಕಾಶ ಬಾತಕೇರ(42), ಮಂಜು ತೋರದ(22), ಅಜ್ಜಾಸ್ವಾಮಿ(58), ಪ್ರವೀಣ ಚಲವಾದಿ(24), ತೇಜಸ್ ರೆಡ್ಡಿ(26) ಮತ್ತು ಶಂಕರ ರಾಯನಗೌಡ್ರ(29) ಗಾಯಗೊಂಡವರು. ಇವರೆಲ್ಲ ಸಾಯಿನಗರದ ನಿವಾಸಿಗಳು.
ಭಾನುವಾರ ತಡರಾತ್ರಿ 1.30ರ ವೇಳೆ ಘಟನೆ ನಡೆದಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮಾಲಾಧಾರಿಗಳನ್ನು ಕೆಎಂಸಿ-ಆರ್ಐಗೆ ದಾಖಲಿಸಲಾಗಿದೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟಿದ್ದು, 58 ವರ್ಷದ ಅಜ್ಜಾಸ್ವಾಮಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರಸಾದ ಅಬ್ಬಯ್ಯ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಕೆಎಂಸಿಆರ್ ಆಸ್ಪತ್ರೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದರು.
ಘಟನೆ ನಡೆದಿದ್ದು ಹೇಗೆ:
ಅಯ್ಯಪ್ಪ ಮಾಲೆ ಧರಿಸಿ ವೃತ ಅಚರಿಸುತ್ತಿದ್ದ ಇವರು, ಈಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಮಾಡುತ್ತಿದ್ದರು. ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ಸಿಲೆಂಡರ್ಗೆ ತಾಗಿ ಉರುಳಿದೆ. ಪರಿಣಾಮ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿ, ದೇವಸ್ಥಾನದಲ್ಲಿ ಹಚ್ಚಿದ್ದ ದೀಪಕ್ಕೆ ತಗುಲಿದೆ. ಆಗ ಒಮ್ಮೆಲೆ ದೇವಸ್ಥಾನದ ಪ್ರಾಂಗಣದಲ್ಲಿ ಬೆಂಕಿಹೊತ್ತುಕೊಂಡು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.