ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಕಿರುತೆರೆಯ ಖ್ಯಾತನಟ, ಮುದ್ದುಲಕ್ಷ್ಮೀ ಸೀರಿಯಲ್ ಖ್ಯಾತಿಯ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ.
ತನಗೆ ಪರಿಚಯವಿದ್ದ ಗೆಳತಿಗೆ ಸೆಕ್ಸುಯಲ್ ಹರಾಸ್ಮೆಂಟ್ ಮಾಡಿರುವ ಆರೋಪ ಈಗ ಚರಿತ್ ಬಾಳಪ್ಪಗೆ ಎದುರಾಗಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅಷ್ಟಲ್ಲದೇ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ, ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದಿದ್ದಾರೆ. ಡಿವೋರ್ಸ್ ನಂತರವೂ ಅವರು ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿದ್ದರು.