ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತೀವ್ರ ಸಂತಾಪ ಸೂಚಿಸಿದೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶೋಕ ಸಂದೇಶ ಪ್ರಕಟಿಸಿದ್ದು, ಸಿಂಗ್ ನಿಧನದಿಂದ ದೇಶವು ತೀವ್ರ ದುಃಖತಪ್ತವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ದೇಶದ ಅತ್ಯುನ್ನತ ನಾಯಕ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದಿಂದ ದೇಶವು ತೀವ್ರ ದುಃಖತಪ್ತವಾಗಿದೆ. ಅವರ ಕುಟುಂಬಕ್ಕೆ, ಅಸಂಖ್ಯಾತ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರ ಸಂತಾಪವನ್ನು ಸೂಚಿಸುತ್ತದೆ. ಸಿಂಗ್ ಅವರು ಬಡತನದ ಹಿನ್ನೆಲೆಯಿಂದ ಬಂದರೂ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಸಿಂಗ್ ಅವರು ಭಾರತಕ್ಕೆ ಕೊಟ್ಟ ಕೊಡುಗೆ ಎಂದೆಂದಿಗೂ ಸ್ಮರಿಸಲಾಗುತ್ತದೆ ಮತ್ತು ಗೌರವಾರ್ಹ. ಅಗಲಿದ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಆ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆರ್ಎಸ್ಎಸ್ ಮುಖ್ಯಸ್ಥ (ಸರಸಂಘ ಚಾಲಕ) ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶೋಕ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.