ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ರಾಜಕೀಯ ಗದ್ದಲದ ನಡುವೆ ಗಣಿಗಾರಿಕಾ ಉದ್ಯಮಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಬಿ.ಶ್ರೀರಾಮುಲು ಅವರಿಗೆ ಸಂಬಂಧಿಸಿದ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪೊಲೀಸರು ಮಹತ್ವದ ಬೆಳವಣಿಗೆ ಕಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಎಂಟು ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಗರದ ಕೌಲ್ ಬಜಾರ್ ಪ್ರದೇಶದ ಯುವಕರನ್ನು ಹಿಡಿದು ಪ್ರಶ್ನಿಸಲಾಗುತ್ತಿದ್ದು, ರೀಲ್ಸ್ ಮಾಡುವ ಉದ್ದೇಶದಿಂದಲೇ ಬೆಂಕಿ ಹಚ್ಚಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸಂಜೆ ಸುಮಾರು 5.30ರ ವೇಳೆಗೆ 20ರಿಂದ 25 ವರ್ಷದೊಳಗಿನ ಯುವಕರು ಸ್ಥಳಕ್ಕೆ ಬಂದು ದುರುದ್ದೇಶದಿಂದ ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಅವಘಡದಿಂದ ಮನೆ ಒಳಗಿನ ಟಿವಿ, ಸೋಫಾ, ಚೇರ್ಗಳು, ಕಿಚನ್ ಸೆಟ್, ಎಸಿ, ಫ್ರಿಜ್, ಮರದ ಬಾಗಿಲುಗಳು ಸೇರಿದಂತೆ ಹಲವು ವಸ್ತುಗಳು ಸಂಪೂರ್ಣ ಸುಟ್ಟುಹೋಗಿವೆ. ಸುಮಾರು 1.25 ಕೋಟಿ ರೂಪಾಯಿ ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



