ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ದೊಡ್ಡ ಮಟ್ಟದ ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು 17 ನಕ್ಸಲರು ಸಾವನ್ನಪ್ಪಿದ್ದಾರೆ.
‘ಆಪರೇಷನ್ ಮೇಘಬುರು’ ಹೆಸರಿನಲ್ಲಿ ಕೋಬ್ರಾ ಪಡೆ, ಚೈಬಾಸಾ ಜಿಲ್ಲಾ ಪೊಲೀಸರು ಹಾಗೂ ಜಾರ್ಖಂಡ್ ಜಾಗ್ವಾರ್ ತಂಡ ಜ.22ರಂದು ಕಾರ್ಯಾಚರಣೆ ಆರಂಭಿಸಿತ್ತು. ಸತತ ಎರಡು ದಿನಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಉನ್ನತ ನಾಯಕ ಪತಿರಾಮ್ ಮಾಝ್ಜಿ ಅಲಿಯಾಸ್ ಅನಲ್ ಡಾ ಹತನಾಗಿದ್ದಾನೆ. ಈತನ ವಿರುದ್ಧ 149ಕ್ಕೂ ಹೆಚ್ಚು ಪ್ರಕರಣಗಳಿದ್ದು, ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಲಾಗಿತ್ತು.
ಆತನೊಂದಿಗೆ ಮೊದಲ ಹಂತದಲ್ಲಿ ಇನ್ನೂ 14 ಮಂದಿ ನಕ್ಸಲರು ಸಾವನ್ನಪ್ಪಿದ್ದರು. ಬಳಿಕ ಮತ್ತೆ ನಡೆದ ಶೋಧ ಕಾರ್ಯಾಚರಣೆಯಲ್ಲಿ ಇನ್ನೆರಡು ಶವಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಅರಣ್ಯ ಪ್ರದೇಶದಲ್ಲಿ ಇನ್ನೂ ಶೋಧ ಮುಂದುವರೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಛತ್ತೀಸ್ಗಢ ಹಾಗೂ ಜಾರ್ಖಂಡ್ ಗಡಿಭಾಗಗಳಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಭದ್ರತಾ ಪಡೆಗಳು ಮಾವೋವಾದಿಗಳ ಚಟುವಟಿಕೆಗಳಿಗೆ ಹೊಡೆತ ನೀಡುತ್ತಿವೆ.



