ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ಗಳ ಹಾವಳಿಯನ್ನು ನಿರ್ದಯವಾಗಿ ಮಟ್ಟ ಹಾಕಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ನಾಗರಿಕ ಸರಕಾರ ಎನ್ನುವುದು, ಗೃಹ ಸಚಿವರು ಎನ್ನುವವರು ಇದ್ದಾರೆಯೇ? ಎಂದು ಕಿಡಿಕಾರಿದರು.
2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಕಿಡಿಗೇಡಿ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನನ್ನ ಸರಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು. ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರೋಪಾಯ ಏನು? ಎಂಬ ಬಗ್ಗೆ ನಾನು ಆಗ ಆಲೋಚನೆ ಮಾಡಿದ್ದೆ ಎಂದರು.
ಆ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಆ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದೆ. ಆಮೇಲೆ ಅದು ಏನಾಯಿತು? ಎಂದು ಪ್ರಶ್ನಿಸಿದರು.