ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ಪರಿಹಾರವನ್ನು ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ಮಹಾಕುಂಭದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಮಂದಿ ಗಾಯಗೊಂಡಿದ್ದಾರೆ. ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ.
ಪ್ರಯಾಗ್ರಾಜ್’ನಲ್ಲಿ ಹೆಚ್ಚು ಜನ ಸೇರಿದ್ದರು. ಬ್ರಹ್ಮ ಮುಹೂರ್ತದಲ್ಲಿ ಸ್ನಾನ ಮಾಡಲು ಭಕ್ತರು ಕಾಯುತ್ತಿದ್ದರು. ವ್ಯವಸ್ಥೆ ಮಾಡಲು ಎಲ್ಲ ಪ್ರಯತ್ನ ಮಾಡಿದೆವು. 8 ಕೋಟಿ ಜನ ಪ್ರಯಾಗ್ರಾಜ್’ನಲ್ಲಿದ್ದರು. ಮಹಾಕುಂಭದಲ್ಲಿ ಜನಜಂಗುಳಿಯಿಂದಾಗಿ ಈ ಅವಘಡ ಸಂಭವಿಸಿದೆ. ಅಪಘಾತದ ಕುರಿತು ತನಿಖೆಗೆ ನ್ಯಾಯಮೂರ್ತಿ ಹರ್ಷ್ ಕುಮಾರ್, ಮಾಜಿ ಡಿಜಿ ವಿಕೆ ಗುಪ್ತಾ ಮತ್ತು ನಿವೃತ್ತ ಐಎಎಸ್ ಡಿಕೆ ಸಿಂಗ್ ನೇತೃತ್ವದಲ್ಲಿ 3 ಸದಸ್ಯರ ನ್ಯಾಯಾಂಗ ಆಯೋಗವನ್ನು ಸರ್ಕಾರ ರಚಿಸಿದೆ ಎಂದು ತಿಳಿಸಿದರು.
ಇದೇ ಸಂದರ್ಭ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.