ಹೊಸದಿಗಂತ ವರದಿ, ಚಿತ್ರದುರ್ಗ:
ಕರ್ನಾಟಕ ವಿಧಾನ ಸಭೆಯಲ್ಲಿ ೨೦೨೫-೨೬ನೇ ಸಾಲಿನ ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯನವರು ಸರ್ವೋದಯದ ಸಿದ್ದಾಂತಕ್ಕೆ ತಿಲಾಂಜಲಿ ಇಡುವ ಮೂಲಕ ಸಮಾಜದಲ್ಲಿ ಅಸಮಾನತೆ ಮತ್ತು ದ್ವೇಷದ ರಾಜಕಾರಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನಾನು ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರನ್ನು ಕೇಳಲು ಬಯಸುತ್ತೇನೆ. ಮಧ್ಯ ಕರ್ನಾಟಕದಲ್ಲಿ ಬಹಳ ಪ್ರಮುಖವಾದ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಒಂದು ರೂಪಾಯಿ ಕೂಡ ಮೀಸಲಿರಿಸಿಲ್ಲ. ನವಲಿ ಮತ್ತು ತುಂಗಾಭದ್ರಾ ನದಿಗೆ ಸಮಾನಾಂತರ ಜಲಾಶಯ ನಿರ್ಮಿಸಲು ಕೂಡ ಹಣ ಇಟ್ಟಿಲ್ಲ.
ಕೇವಲ ಹಿಂದಿನ ಸರ್ಕಾರದಲ್ಲಿ ಮಂಜೂರಾಗಿ ನಡೆಯುತ್ತಿರುವ ಕಾಮಗಾರಿಗಳ ಪಟ್ಟಿಯನ್ನು ಇಂದು ಆಯವ್ಯಯದ ಪುಸ್ತಕದಲ್ಲಿ ಮುದ್ರಿಸಿ ಜನರ ಕಲ್ಯಾಣವನ್ನು ಬಯಸದೆ ಜನರಿಗೆ ಮೋಸ ಮಾಡುವಂತಹ ನಿರಾಸಾದಾಯಕ ಬಜೆಟ್ ಆಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿರಾಜ್ಯವನ್ನುಅಭಿವೃದ್ಧಿಯದೃಷ್ಟಿಯಲ್ಲಿ ೧೦ ವರ್ಷದಷ್ಟು ಹಿಂದಕ್ಕೆ ತಳ್ಳಿದೆ.ಮುಂಬರುವ ದಿನಗಳಲ್ಲಿ ಅಲ್ಪ ಸಂಖ್ಯಾತರ ಓಲೈಕೆಗಾಗಿ ಸಿದ್ದರಾಮಯ್ಯನವರು ಅಲ್ಪ ಸಂಖ್ಯಾತರಿಗಾಗಿಯೇ ಪ್ರತ್ಯೇಕ ಬಜೆಟ್ ಮಂಡಿಸಿದರೂ ಆಶ್ಚರ್ಯಪಡಬೇಕಿಲ್ಲ ಎಂದಿದ್ದಾರೆ.