ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಪಿಎಲ್ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಲು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಿಗರನ್ನು ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಪರಿಷತ್ನಲ್ಲಿ ಬಿಜೆಪಿಯ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿ, ಬಿಪಿಎಲ್ ಕಾರ್ಡ್ ಹೊಂದಿರುವರ ಪೈಕಿ ಸುಮಾರು 20 ಲಕ್ಷ ಅನರ್ಹರಿದ್ದಾರೆ, ಇವರೆಲ್ಲರೂ ಎಪಿಎಲ್ ಕಾರ್ಡ್ ಪಡೆಯಬೇಕಿತ್ತು. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ಪರಿಷ್ಕರಣೆಗೆ ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಯಿತು ಎಂದರು.
ಈಗ ಸುಮಾರು 91 ಸಾವಿರ ಅರ್ಜಿಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.