ಹೊಸದಿಗಂತ ವರದಿ ಗದಗ:
ರೋಣ ತಹಸೀಲ್ದಾರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಣ ತಹಸೀಲ್ದಾರ್ ನಾಗರಾಜ ಕೆ. ಅವರು ಜನವರಿ 25ರ ಮಧ್ಯರಾತ್ರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹನುಮಂತ ಚಲವಾದಿ ಮತ್ತು ಶರಣಪ್ಪ ಎನ್ನುವವರ ವಿರುದ್ಧ ದೂರು ನೀಡಿದ್ದರು. ದೂರಿನನ್ವಯ ಯೂಟ್ಯೂಬ್ ಪತ್ರಕರ್ತನೆಂದು ಹೇಳಿಕೊಳ್ಳುತ್ತಿದ್ದ ಹನುಮಂತ ಚಲವಾದಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಯುಟ್ಯೂಬರ್ ಹನುಮಂತ ಚಲವಾದಿ, ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುವ ಕೆಲಸ ಮಾಡುತ್ತಿದ್ದ. ಇಂಥದ್ದೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ನಾಗರಾಜ್ ಕೆ. ಅವರು ಪ್ರಿವೆಂಟಿವ್ ಸೆಕ್ಷನ್ ಅಡಿ ಬಾಂಡ್ ಓವರ್ (ಮುಚ್ಚಳಿಕೆ) ಪಡೆದುಕೊಂಡಿದ್ದರು.
ಆ ಬಾಂಡ್ ಓವರ್ ಹಿಂಪಡೆಯುವಂತೆ ಒತ್ತಾಯಿಸಿ, ಆತ ಜನವರಿ 25ರ ಮಧ್ಯರಾತ್ರಿ ಅತಿಕ್ರಮವಾಗಿ ತಹಸೀಲ್ದಾರ್ ನಾಗರಾಜ ಕೆ. ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ, ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.



