ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಮಳೆ ಸುರಿದಿದ್ದು, ರಸ್ತೆಗಳೆಲ್ಲ ಹೊಳ್ಳಗಳಂತೆ ಕಾಣುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಬಿರುಸಿನ ಮತ್ತು ಆಲಿಕಲ್ಲು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಪ್ರಮುಖ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಪ್ರಯಾಣಿಕರು ಮೊಣಕಾಲು ಮಟ್ಟದ ನೀರಿನಲ್ಲಿ ಸಂಚರಿಸಲು ಪರದಾಡಬೇಕಾಯಿತು. ವಿಶೇಷವಾಗಿ ಪೂರ್ವ ಬೆಂಗಳೂರಿನ ಪ್ರದೇಶಗಳಾದ ವೈಟ್ಫೀಲ್ಡ್, ಮಾರತಹಳ್ಳಿ, ಬಾಣಸವಾಡಿ ಮತ್ತು ಹೆಬ್ಬಾಳದಲ್ಲಿ ಬುಧವಾರವೂ ಭಾರೀ ಮಳೆಯಾಗಿದ್ದು, ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗಿದೆ.
ಮಳೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ವ್ಯಾಪಿಸಿದೆ. ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಗಳು ತೀವ್ರ ಹವಾಮಾನ ಅಪಾಯಗಳನ್ನು ಸೂಚಿಸದಿದ್ದರೂ, ನಿವಾಸಿಗಳು ಜಾಗರೂಕರಾಗಿರಲು ಮತ್ತು ಗುಡುಗು ಸಹಿತ ಮಳೆಯ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.