ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಂಎಲ್ಸಿ ನಜೀರ್ ಅಹ್ಮದ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ನಜೀರ್ ಅಹ್ಮದ್ ಅವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿದ್ದು, ಸದನದ ಘನತೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇದನ್ನೂ ಓದಿ:
ಈ ಸಂಬಂಧ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರಿಗೆ ದೂರು ಸಲ್ಲಿಸಿದೆ. ‘ಪ್ರಧಾನಿ ವಿರುದ್ಧ ಬಳಸಲಾದ ಪದಗಳು ಕೀಳು ಮಟ್ಟದ ರಾಜಕೀಯದ ಪ್ರತಿಬಿಂಬ. ಪ್ರಜಾಪ್ರಭುತ್ವದ ಗೌರವ ಕಾಪಾಡಲು ಕಠಿಣ ಕ್ರಮ ಅಗತ್ಯ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.
ಘಟನೆ ವೇಳೆ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಉತ್ತರಿಸುತ್ತಿದ್ದಾಗ ವಿವಾದ ಭುಗಿಲೆದ್ದಿತು. ನಜೀರ್ ಅಹ್ಮದ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಕ್ಷಮೆಯಾಚನೆಗೆ ಆಗ್ರಹಿಸಿದರೂ, ಒಪ್ಪದ ಕಾರಣ ಗದ್ದಲ ಹೆಚ್ಚಾಗಿ, ಸಭಾಪತಿ ಕಲಾಪವನ್ನು ಮುಂದೂಡಿದರು.



