ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಗೆ ನೆರೆ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೈಂದೂರು, ಕುಂದಾಪುರ, ಕೋಟ, ಸಾಲಿಗ್ರಾಮ, ಬ್ರಹ್ಮಾವರ, ಮಣಿಪಾಲ, ಹೆಬ್ರಿ, ಕಾರ್ಕಳ, ಉದ್ಯಾವರ ಸೇರಿದಂತೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಬೈಂದೂರು ಮತ್ತು ಕುಂದಾಪುರದ ಕೆಲವೆಡೆ ಮೇಘಸ್ಫೋಟ ಸಂಭವಿಸಿದ್ದು, ಬಿಜೂರು, ಸಾಲ್ಬುಡ, ಹಳಗೇರಿ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸುಮನಾವತಿ, ಎಡಮಾವಿನಹೊಳೆ, ಸೌಪರ್ಣಿಕಾ ನದಿಗಳು ಉಕ್ಕಿ ಹರಿದು ಮನೆಗಳು ಮತ್ತು ಸುಮಾರು 50 ಎಕರೆಗೂ ಹೆಚ್ಚು ಬೆಳೆ ಜಲಾವೃತವಾಗಿದೆ.
ಸ್ಥಳಕ್ಕೆ ಎನ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಅಗ್ನಿಶಾಮಕ ಸಿಬ್ಬಂದಿ ನೆರವಾಗಿದ್ದಾರೆ. ಬೈಂದೂರಿನಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು, ಸಂತ್ರಸ್ತರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ವತಃ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಶಾಸಕ ಗುರುರಾಜ್ ಗಂಟಿಹೊಳೆ, ಜಿಲ್ಲಾಡಳಿತ ಹಾಗೂ ಸ್ಥಳೀಯರ ಸಹಕಾರದೊಂದಿಗೆ ನೆರೆಪೀಡಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಗಂಜಿ ಕೇಂದ್ರಗಳನ್ನು ಹೆಚ್ಚಿಸಲು ಚರ್ಚಿಸಲಾಗುವುದು, ಪ್ರವಾಹ ಇಳಿದ ನಂತರ ಸೂಕ್ತ ಪರಿಹಾರ ದೊರಕಿಸಲು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಸ್ಥಳೀಯರಾದ ಗೋಪಾಲ ಗಾಣಿಗ , ಹಳಗೇರಿ ಗ್ರಾಮದಲ್ಲಿ ಸುಮಾರು ಹತ್ತು ಮನೆಗಳು ಜಲಾವೃತವಾಗಿವೆ. ಬೆಳಗಿನ 4 ಗಂಟೆ ಸುಮಾರಿಗೆ ಏಕಾಏಕಿ ನೀರು ಮನೆಗಳಿಗೆ ನುಗ್ಗಿದೆ. ಕಳೆದ 25 ವರ್ಷಗಳಲ್ಲಿ ಉಂಟಾಗಿರುವ ಅತ್ಯಂತ ದೊಡ್ಡ ಪ್ರವಾಹ ಇದಾಗಿದೆ ಎಂದರು.