ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ಮರಗಳನ್ನು ಗುರುತಿಸಿ ಅವುಗಳ ರೆಂಬೆ, ಕೊಂಬೆಗಳನ್ನು ಕತ್ತರಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇಂದು ರಸ್ತೆ ಬದಿಯ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ ಅಕ್ಷಯ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದರು.
ಮಳೆ, ಗಾಳಿಗೆ ಟೊಳ್ಳು ಮರಗಳು ಮತ್ತು ಬೇರು ಕಚ್ಚದ ಮರಗಳು ಧರಾಶಾಯಿ ಆಗುತ್ತವೆ. ಇದಕ್ಕೆ ಕಾರಣ ಬೇರಿಗೆ ನೀರು ಇಳಿಯದಂತೆ ಹಾಕಲಾಗಿರುವ ಕಾಂಕ್ರೀಟ್, ಕಲ್ಲಿನ ಚಪ್ಪಡಿ, ಟೈಲ್ಸ್ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವೂ ತೀರ್ಪು ನೀಡಿದ್ದು, ಸರ್ಕಾರ ಈ ಸಂಬಂಧ ಅಧಿಕೃತ ಆದೇಶವನ್ನೇ ಹೊರಡಿಸಿದೆ ಎಂದರು.