ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ ಜತೆ ಸಂಪರ್ಕದಲ್ಲಿದ್ದ ಭಾರತೀಯ ಸೇನಾ ಸಿಬ್ಬಂದಿಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಪಂಜಾಬ್ನ ಅಮೃತಸರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನಾದ ಗುರುಪ್ರೀತ್ ಗೋಪಿಯನ್ನು ಸೇನಾ ಸಿಪಾಯಿ ಎಂದು ಗುರುತಿಸಲಾಗಿದೆ.ಮತ್ತೋರ್ವ ಸಾಹಿಲ್ ಮಸಿಹ್ ಅಕಾ ಶಾಲಿ ಎಂದು ಗುರುತಿಸಲಾಗಿದೆ. ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ನೊಂದಿಗೆ ಸಂಪರ್ಕದಲ್ಲಿದ್ದ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಗುರುಪ್ರೀತ್ ಗೋಪಿ ವಿರುದ್ಧ ರಹಸ್ಯ ಕಾಯ್ದೆಯ ಸೆಕ್ಷನ್ 359 ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 35ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಪತ್ರಕರ್ತರಿಗೆ ಮಾಹಿತಿ ನೀಡಿದ ಅಮೃತಸರ ಗ್ರಾಮೀಣ ಪೊಲೀಸ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಮಣೀಂದರ್, ಭಾರತೀಯ ಸೇನೆಯಲ್ಲಿ ಸಿಪಾಯಿಯಾಗಿರುವ ಗುರುಪ್ರೀತ್ ಗೋಪಿ ಐಎಸ್ಐ ಜತೆ ಸಂಪರ್ಕ ಹೊಂದಿದ್ದನು ಎಂಬ ಮಾಹಿತಿ ಸಿಕ್ಕಿದ್ದು, ಆತ ಧರಿವಾಲ್ ಗ್ರಾಮದ ತಮ್ಮ ಸ್ನೇಹಿತ ಸಾಹಿಲ್ ಮಸಿಹ್ ಜತೆ ಅನುಮಾನಾಸ್ಪದ ಹಣಕಾಸಿನ ವಹಿವಾಟು ನಡೆಸುತ್ತಿದ್ದ. ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಭಾರತೀಯ ಸೇನೆಯು ಗುರ್ಪ್ರೀತ್ನನ್ನು ಜಮ್ಮುವಿನಲ್ಲಿ ನಿಯೋಜಿಸಿತ್ತು. ಆತನ ಬಂಧನದ ಬಳಿಕ ಹಲವಾರು ಮಾಹಿತಿ ಬಹಿರಂಗವಾಗಿದೆ. ವಿವರವಾದ ತನಿಖೆಯ ಬಳಿಕ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತು ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದ್ದು, ಜಂಟಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪಂಜಾಬ್ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಅಮೃತಸರ ಗ್ರಾಮೀಣ ಪೊಲೀಸರು ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ಗೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಶಂಕಿತ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ ಗುರ್ಪ್ರೀತ್ ಸಿಂಗ್ ಐಎಸ್ಐ ಕಾರ್ಯಕರ್ತನೊಂದಿಗೆ ನೇರ ಸಂಪರ್ಕದಲ್ಲಿದ್ದ ಮತ್ತು ಪೆನ್ ಡ್ರೈವ್ ಮೂಲಕ ಅವರಿಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಹೆಂಚಿಕೊಳ್ಳುತ್ತಿದ್ದ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಐಎಸ್ಐ ನಿರ್ವಾಹಕನನ್ನು ರಾಣಾ ಜಾವೇದ್ ಎಂದು ಗುರುತಿಸಲಾಗಿದೆ. ಗುರುಪ್ರೀತ್ ಸಿಂಗ್ ಐಎಸ್ಐ ಕಾರ್ಯಕರ್ತರೊಂದಿಗೆ ಸಂವಹನ ನಡೆಸಲು ಬಳಸುತ್ತಿದ್ದ ಎರಡು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.