ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ಕಂಡ ಕಂಡಲ್ಲಿ ಗಲಭೆ ಮಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ಎಸ್ಪಿ ಡಾ.ವಿಕ್ರಮ ಅಮಟೆ ಅವರಿಗೆ ಮನವಿ ಸಲ್ಲಿಸಿದೆ.
ಮಾದಕ ವಸ್ತುಗಳ ಹಾವಳಿಯು ಯುವ ಜನತೆಯನ್ನು ದಿಕ್ಕು ತಪ್ಪಿಸುತ್ತಿದ್ದು, ನಗರದ ಸಾಯಿ ವಧುವನ ಬಡಾವಣೆಯಲ್ಲಿರುವ ಪಾರ್ಕ್, ಗೌರಿ ಕಾಲುವೆ, ನರಿಗುಡ್ಡನಹಳ್ಳಿ ವೃತ್ತ ದಲ್ಲಿ ಖಾಲಿಯಿರುವ ಲೇಔಟ್ಗಳಲ್ಲಿ, ಎ.ಐಟಿ ವೃತ್ತ ವಾಜಪೇಯಿ ಲೇಔಟ್, ರೈಲ್ವೆ ನಿಲ್ದಾಣದ ಸುತ್ತಮುತ್ತ ಸೇರಿದಂತೆ ನಗರದ ನಾನಾ ಭಾಗಗಳಲ್ಲಿ ದಿನ ಬೆಳಗಾದರೆ ಗಾಂಜಾ ಸೇವಿಸಿ ಬೈಕ್ ವೀಲಿಂಗ್ ಮಾಡುವುದು, ರಸ್ತೆಯಲ್ಲಿ ನಡೆದಾಡುವ ಸಾರ್ವಜನಿಕರಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡು ಬರುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಸ್ವಾಸ್ಥ್ಯ ಕೆಡಿಸುವ ಇಂಥಹ ಕೃತ್ಯಗಳು ಇನ್ನಷ್ಟು ಉಲ್ಬಣಗೊಳ್ಳುವ ಮೊದಲೇ ಪೋಲಿಸ್ ಇಲಾಖೆ ಎಚ್ಚೆತ್ತು ಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಮತ್ತು ಮಾದಕ ವ್ಯಸನಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಈ ವೇಳೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಮಾತನಾಡಿ, ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಬೇರೆ ಬೇರೆ ಭಾಗಗಳಿಗೆ ಹೊರಗಿನಿಂದ ಸಾಕಷ್ಟು ಪ್ರವಾಸಿಗರು ಬರುತ್ತಿದ್ದಾರೆ. ಆ ಪೈಕಿ ಕೆಲವರು ಗಾಂಜಾ ಸೇರಿದಂತೆ ಇನ್ನಿತರೆ ಮಾದಕ ವಸ್ತುಗಳನ್ನು ತಂದು ಜಿಲ್ಲೆಯ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಗಾಂಜಾ ಪೆಡ್ಲರ್ಗಳು, ಇನ್ನಿತರೆ ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾಲೇಜು ಕ್ಯಾಂಪಸ್ಗಳು ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಈ ರೀತಿ ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಮತ್ತು ಸೇವನೆ ಮಾಡುವವರು ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ಕೊಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್ ಗೌಡ, ನಗರಾಧ್ಯಕ್ಷ ಜೀವನ್ ಕೋಟೆ, ಗ್ರಾಮಾಂತರ ಅಧ್ಯಕ್ಷ ಪುನೀತ್ ಗೌಡ, ಜಿಲ್ಲಾ ಉಪಾಧ್ಯಕ್ಷೆ ಅಂಕಿತ ಗೌಡ, ವಿವಿಧ ಪದಾಧಿಕಾರಿಗಳಾದ ರಾಜೇಶ್ ಕಲ್ದೊಡ್ಡಿ, ಶಶಿ ಆಲ್ದೂರು, ಪುನೀತ್ ದೇವಾಂಗ, ಗೌತಮ ಅಟಕ , ಪುನೀತ್ ಬಿ.ಸಿ., ಕಾರ್ತಿಕ್ ಸೋಮಶೇಖರ್, ತಿಲಕ್ ರಾಜ ಅರಸ್, ಮಧು ನಾಯರ್, ಕಾರ್ತಿಕ್ ಇದ್ದರು.