ಚಿನ್ನಾಭರಣ ಕಳ್ಳತನ ಪ್ರಕರಣ: ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಹೊಸದಿಗಂತ ವಿಜಯಪುರ:

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಕಳೆದ ಮೇ 25 ರಂದು ನಡೆದಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆಜಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳಿಯ ಕೆನರಾ ಬ್ಯಾಂಕ್ ಹಿರಿಯ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬ್ಯಾಂಕ್‌ನ ಲಾಕರ್‌ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆಜಿ (58,976.94 ಗ್ರಾಂ.) ಬಂಗಾರದ ಆಭರಣಗಳು ಹಾಗೂ ನಗದು ಹಣ 5,20,450 ಸೇರಿ ಹೀಗೆ ಒಟ್ಟು 53,31,20,450 ಕೋಟಿ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿ ಪರಾರಿ ಆಗಿದ್ದ ಘಟನೆ ಭೇದಿಸಲು ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಎಂದರು.

ಈ ಪ್ರಕರಣದಲ್ಲಿ ಹುಬ್ಬಳ್ಳಿಯ ಕೆನರಾ ಬ್ಯಾಂಕ್‌ನ ಹಿರಿಯ ಮ್ಯಾನೇಜರ್ ವಿಜಯಕುಮಾರ ಮೋಹನರಾದ ಮಿರಿಯಾಲ (41), ಹುಬ್ಬಳ್ಳಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ಕೋಟಿಲಿಂಗಮ್ ನೆರೆಲ್ಲಾ (38), ಸುನೀಲ ನಂರಸಿಂಹಲು ಮೋಕಾ (40) ಬಂಧಿತ ಆರೋಪಿಗಳಾಗಿದ್ದು, ಈ ಆರೋಪಿಗಳು ವ್ಯವಸ್ಥಿತವಾಗಿ ಸಂಚು ರೂಪಿಸಿ ಬ್ಯಾಂಕಿನಲ್ಲಿದ್ದ ದೊಡ್ಡ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದರು. ಅಲ್ಲದೆ ತನಿಖೆಯ ದಿಕ್ಕು ತಪ್ಪಿಸಲು ಮಾಟ, ಮಂತ್ರದಂತಹ ಹಲವು ಘಟನೆಗಳನ್ನು ಸೃಷ್ಟಿಸಲಾಗಿತ್ತು ಎಂದರು.

ಇನ್ನು ಆರೋಪಿತರಿಂದ ಕೃತ್ಯಕ್ಕೆ ಬಳಸಿದ 2 ಕಾರುಗಳು ಹಾಗೂ ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10.75 ಕೋಟಿ ರೂ. ಮೌಲ್ಯದ 10.5 ಕೆಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದು, ಇನ್ನಿತರ ಆರೋಪಿಗಳ ಬಂಧನ ಹಾಗೂ ಕಳ್ಳತನವಾದ ವಸ್ತುಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!