ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಮ್ಮ ಮೆಟ್ರೋ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ.
ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್ ಖಟ್ಟರ್ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದ ಸೂರ್ಯ, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ. ಈ ಕುರಿತು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವ ಎಂ.ಎಲ್ ಖಟ್ಟರ್ ಅವರನ್ನು ಇಂದು ಭೇಟಿ ಮಾಡಿ ವಿವರವಾಗಿ ಮಾಹಿತಿ ನೀಡಿದ್ದು, ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.
ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.



