ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕೋಲ್ಕತ್ತಾ (ಐಐಎಂ-ಸಿ) ಕ್ಯಾಂಪಸ್ನಲ್ಲಿ ಜುಲೈ 11 ರಂದು ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಲೋಕಾಪುರ ಮೂಲದ ವಿದ್ಯಾರ್ಥಿ ಪರಮಾನಂದ ಟೋಪಣ್ಣವರ (ಪರಮಾನಂದ ಜೈನ್)ಗೆ ಅಲಿಪುರ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪರಮಾನಂದ ಜೈನ್ ವಿರುದ್ಧ ಸಹಪಾಠಿಯೊಬ್ಬಳು ಅತ್ಯಾಚಾರ ಆರೋಪ ಮಾಡಿದ್ದಳು. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು. ಆದರೆ ಪ್ರಕರಣದ ತನಿಖೆಯಲ್ಲಿ ಹಲವು ಅಸ್ಪಷ್ಟತೆಗಳು ಉಂಟಾಗಿದ್ದು, ಯುವತಿಯು ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಆರೋಪಿಗೆ ಜಾಮೀನು ದೊರೆತಿದೆ.
ಕೋರ್ಟ್ ಮುಂದೆ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ, ದೂರುದಾರ ಯುವತಿ ತನಿಖೆಗೆ ಸಹಕರಿಸದೆ, ಎರಡು ಬಾರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿಲ್ಲ. ಪೊಲೀಸರು ಆಕೆಯನ್ನು ಸಂಪರ್ಕಿಸಲು ಅನೇಕ ಪ್ರಯತ್ನಗಳನ್ನು ನಡೆಸಿದರೂ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವ ಕಾರಣ ಸಂಪರ್ಕ ಸಾಧ್ಯವಾಗಿಲ್ಲ. ಈ ಅಸಹಕಾರದ ಹಿನ್ನೆಲೆಯಲ್ಲಿ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ಅಲಿಪುರ ಸ್ಥಳೀಯ ಕೋರ್ಟ್ 50,000 ರೂ.ಗಳ ವೈಯಕ್ತಿಕ ಬಾಂಡ್ಗೆ ಸಂಬಂಧಿಸಿದಂತೆ ಪರಮಾನಂದ ಜೈನ್ಗೆ ಜಾಮೀನು ಮಂಜೂರು ಮಾಡಿದ್ದು, ಅವರಿಗೆ ವಿಧಿಸಿದ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿದೆ. ಈ ಪ್ರಕರಣವು ಐಐಎಂ ಕೋಲ್ಕತ್ತಾ ನಾಮಪತ್ರಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ನಲ್ಲಿ ಸಂಭವಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಸಂಚಲನವನ್ನು ಉಂಟುಮಾಡಿತ್ತು.
ಈ ಮಧ್ಯೆ, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಯುವತಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.