ಹೊಸದಿಗಂತ ಯಾದಗಿರಿ:
ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರು ಶನಿವಾರ ಮುಂಜಾನೆ ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಹೊರರೋಗಿ ವಿಭಾಗ, ಸಾಮಾನ್ಯ ವಾರ್ಡ್ಗಳು ಹಾಗೂ ಮಾನಸಿಕ ಚಿಕಿತ್ಸಾ ಘಟಕಗಳನ್ನು ವೀಕ್ಷಿಸಿದ ಸಚಿವರು, ರೋಗಿಗಳಿಗೆ ದೊರೆಯುತ್ತಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಪ್ರಮುಖವಾಗಿ ಓಪಿಡಿಗಳಲ್ಲಿ ಜನದಟ್ಟಣೆ ಉಂಟಾಗುತ್ತಿರುವುದನ್ನು ಗಮನಿಸಿದ ಅವರು, ಸಾರ್ವಜನಿಕರಿಗೆ ವಿಶೇಷವಾಗಿ ವೃದ್ಧರಿಗೆ ತೊಂದರೆಯಾಗದಂತೆ ಹೆಚ್ಚುವರಿ ಕೌಂಟರ್ಗಳನ್ನು ತೆರೆಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ, ವೈದ್ಯಕೀಯ ಸಂಸ್ಥೆಯ ಡೀನ್ ಡಾ. ಸಂದೀಪ್ ಹೆಚ್ ಹಾಗೂ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.



