ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ‘ಮುಖ್ಯಮಂತ್ರಿ ಬದಲಾವಣೆ’ ಎಂಬ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. “ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿ ಇರುತ್ತಾರೆ” ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಪ್ರತಿಕ್ರಿಯೆ ಹಲವು ಅರ್ಥಗಳನ್ನು ಹುಟ್ಟುಹಾಕಿದೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಪಟ್ಟದ ಕುರಿತಾದ ಪ್ರಶ್ನೆಗಳಿಗೆ ಬಹಳ ಚಾಣಾಕ್ಷತನದಿಂದ ಉತ್ತರಿಸಿದರು.
“ನಾನು ಸಿಎಂ ಆಗಬೇಕು ಎಂಬ ಆಸೆ ನನ್ನ ಬೆಂಬಲಿಗರಿಗೆ, ಶಾಸಕರಿಗೆ ಮತ್ತು ಸಾರ್ವಜನಿಕರಿಗೆ ಇರುವುದು ನಿಜ. ಆದರೆ, ಅಂತಿಮವಾಗಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಶಿರಸಾವಹ್ಯ,” ಎಂದು ಅವರು ಸ್ಪಷ್ಟಪಡಿಸಿದರು.
ಫೆಬ್ರವರಿ ಬಜೆಟ್ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆಯೇ? ಎಂಬ ನೇರ ಪ್ರಶ್ನೆಗೆ, “ಅದಕ್ಕೆ ಕಾಲವೇ ಉತ್ತರಿಸಲಿದೆ,” ಎಂದು ಹೇಳುವ ಮೂಲಕ ಕುತೂಹಲವನ್ನು ಜೀವಂತವಾಗಿರಿಸಿದರು.



