ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಅದೇ ಸಮಯದಲ್ಲಿ ಇದೀಗ ಕರ್ನಾಟಕದಲ್ಲಿ ಗೊಬ್ಬರ ಕೊರತೆ ಉಂಟಾಗಿದ್ದು, ನೋ ಸ್ಟಾಕ್ ಬೋರ್ಡ್ ಬೇಸರ ತರಿಸಿದೆ.
ಕೇಂದ್ರ ಗೊಬ್ಬರ ಪೂರೈಸಿದರೂ ರಾಜ್ಯ ಸರ್ಕಾರ ಕೊಡುತ್ತಿಲ್ಲವೇ? ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದಲೇ ಸರಬರಾಜು ಆಗುತ್ತಿಲ್ಲವೇ? ಏನೇನೂ ಮಾಹಿತಿ ಸಿಗದ ರೈತ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ. ರಸಗೊಬ್ಬರ ಪೂರೈಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಬರೆದಿರುವ ಪತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿಗಿ ನಿಗಿ ಕೆಂಡವಾಗಿದ್ದಾರೆ.
ಮಳೆ ಬರುವ ಮೊದಲೇ ಮೋದಿಗೆ ಪತ್ರ ಬರೆಯಬೇಕಿತ್ತು ಎಂದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಪರಮೇಶ್ವರ್, ಕೇಂದ್ರದಿಂದಲೇ ಗೊಬ್ಬರ ಪೂರೈಕೆಯಾಗಿಲ್ಲ ಎಂದಿದ್ದಾರೆ. ಇದಕ್ಕೆ ಪಂಚ್ ಕೊಟ್ಟ ವಿಜಯೇಂದ್ರ, ಎರಡೂವರೆ ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರವೇ ಗೊಬ್ಬರ ಕೊರತೆಗೆ ಕಾರಣ ಎಂದು ಆರೋಪಿಸುತ್ತಿರುವ ಬಿಜೆಪಿ, ರೈತರ ಸಂಕಷ್ಟವನ್ನು ಮುಂದಿಟ್ಟು ಹೋರಾಟಕ್ಕೆ ಮುಂದಾಗಿದೆ. ಇಂದು ರಾಜ್ಯಾದ್ಯಂತ ಹೋರಾಟಕ್ಕಿಳಿಯಲಿದೆ. ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಜಿಲ್ಲೆ ಜಿಲ್ಲೆಯಲ್ಲೂ ಪ್ರತಿಭಟಿಸಲಿದ್ದಾರೆ.