ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ದಿಟ್ಟ ಹೋರಾಟಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ. ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ ಬರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ಇದೊಂದು ಐತಿಹಾಸಿಕ ಹೋರಾಟ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ ಎಂದು ತಿಳಿಸಿದರು.