ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರು ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವದೆಹಲಿಯಲ್ಲಿ ಎನ್ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಮತ್ತು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು.
ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಮತ್ತು ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ ಬಿಜೆಪಿ ನಾಯಕ ರಾಧಾಕೃಷ್ಣನ್ ಅವರನ್ನು ಭಾನುವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎನ್ಡಿಎ ಅಭ್ಯರ್ಥಿಯಾಗಿ ಹೆಸರಿಸಿದ್ದರು.
ಪ್ರಧಾನಿ ಮೋದಿ ಅವರು ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ‘ಸಿಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ. ಎನ್ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಅವರು ಯಾವಾಗಲೂ ಪ್ರದರ್ಶಿಸಿದ ಅದೇ ಸಮರ್ಪಣೆ ಮತ್ತು ಸಂಕಲ್ಪದೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ’ ಎಂದು ಮೋದಿ ಹೇಳಿದ್ದಾರೆ.
ಸಿ.ಪಿ ರಾಧಾಕೃಷ್ಣನ್ ಆಗಸ್ಟ್ 20ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಮಂಗಳವಾರ ನಡೆಯಲಿರುವ ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅವರನ್ನು ಸನ್ಮಾನಿಸುವ ನಿರೀಕ್ಷೆಯಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 21ರಂದು ಜಗದೀಪ್ ಧನ್ಖರ್ ಅವರ ದಿಢೀರ್ ರಾಜೀನಾಮೆಯ ನಂತರ ಉಪರಾಷ್ಟ್ರಪತಿ ಸ್ಥಾನ ತೆರವಾಗಿತ್ತು.