ಹೊಸದಿಗಂತ ಡಿಜಿಟಲ್ ಡೆಸ್ಕ್:
ಸತತ 30 ದಿನ ಬಂಧನಕ್ಕೊಳಗಾಗುವ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಸೇರಿ ಜನಪ್ರತಿನಿಧಿಗಳನ್ನು ಅಧಿಕಾರದಿಂದ ವಜಾಗೊಳಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಂಡಿಸಿದ್ದಾರೆ. ಇದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದವು.
ಈ ವೇಳೆ ಕಾಂಗ್ರೆಸ್ ಸಂಸದ ಕೆ.ಸಿ ವೇಣುಗೋಪಾಲ್ ,ಅಮಿತ್ ಶಾ ಅವರ ಹಳೆಯ ಪ್ರಕರಣವನ್ನು ನೆನಪಿಸಿದರು.’ರಾಜಕೀಯದಲ್ಲಿ ನೈತಿಕತೆಯನ್ನು ತರಲು ಬಿಜೆಪಿಯವರು ಹೀಗೆ ಹೇಳುತ್ತಿದ್ದಾರೆ. ಅಮಿತ್ ಶಾ ಗುಜರಾತಿನ ಗೃಹ ಸಚಿವರಾಗಿದ್ದಾಗಲೇ ಜೈಲಿಗೆ ಹೋಗಿದ್ದರು. ಅವರು ನೈತಿಕತೆ ಆಧಾರದ ಮೇಲೆ ರಾಜೀನಾಮೆ ನೀಡಿದ್ದಾರಾ?’ ಎಂದು ಪ್ರಶ್ನಿಸಿದರು.
ಇದಕ್ಕೆ ಸದನದಲ್ಲಿ ಎದ್ದುನಿಂತು ಪ್ರತಿಕ್ರಿಯಿಸಿದ ಅಮಿತ್ ಶಾ, ‘ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಯಿತು. ಆದರೂ ನೈತಿಕತೆಯ ಆಧಾರದ ಮೇಲೆ ಬಂಧನಕ್ಕೂ ಮೊದಲೇ ನಾನು ಗುಜರಾತ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ನ್ಯಾಯಾಲಯಗಳಿಂದ ಎಲ್ಲಾ ಆರೋಪಗಳಿಂದ ಮುಕ್ತನಾಗುವವರೆಗೆ ಯಾವುದೇ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡಿರಲಿಲ್ಲ’ ಎಂದು ತಿರುಗೇಟು ನೀಡಿದರು.