ಹೊಸದಿಗಂತ ವರದಿ ಮಂಗಳೂರು:
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮಹೇಶ್ ಶೆಟ್ಟಿ, ಸಂತೋಷ್ ವಿರುದ್ಧ ಅವಹೇಳನಕಾರಿ ಮಾತನಾಡಿದ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಬಗ್ಗೆ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ BSN 196 (1), 352, 353 (2) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು ಎಂಟು ವಾಹನಗಳಲ್ಲಿ ಬೆಳ್ತಂಗಡಿಯ ಉಜಿರೆಯ ಅವರ ನಿವಾಸಕ್ಕೆ ಆಗಮಿಸಿದ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂದರ್ಭ ಮಹೇಶ್ ಶೆಟ್ಟಿ ಬೆಂಬಲಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಅವರನ್ನು ಠಾಣೆಗೆ ಕರೆದೊಯ್ದರು.