ಹೊಸದಿಗಂತ ವರದಿ ಸೋಮವಾರಪೇಟೆ:
ಕೊಡ್ಲಿಪೇಟೆ ಸಮೀಪದ ದೊಡ್ಡಕೊಡ್ಲಿ ಗ್ರಾಮದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಇಟ್ಟಿಗೆ ಕಾರ್ಖಾನೆಗೆ ಸೋಮವಾರಪೇಟೆ ತಾಲೂಕು ದಂಡಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಕಾರ್ಖಾನೆಯನ್ನು ಮುಟ್ಟಗೋಲು ಹಾಕಿಕೊಂಡಿದ್ದಾರೆ.
ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಹೋಬಳಿಯ ದೊಡ್ಡಕೊಡ್ಲಿ ಗ್ರಾಮದಲ್ಲಿ ದಿವಾಕರ, ವಿಜಯ ಹಾಗೂ ಪ್ರದೀಪ್ ಎಂಬವರ ಮಾಲಕತ್ವದಲ್ಲಿ ಅನಧಿಕೃತವಾಗಿ ಇಟ್ಟಿಗೆ ಕಾರ್ಖಾನೆ ನಡೆಸಲಾಗುತ್ತಿತ್ತು. ವಿಷಯ ತಿಳಿದ ಸೋಮವಾರಪೇಟೆ ತಹಶೀಲ್ದಾರರ ನೇತೃತ್ವದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖಾಧಿಕಾರಿಗಳು ಜಂಟಿ ದಾಳಿ ನಡೆಸಿದರು.
ದಾಳಿ ಸಂದರ್ಭ, ಇಟ್ಟಿಗೆ ಕಾರ್ಖಾನೆಗೆ ನಿರ್ವಹಿಸಲು ಸ್ಥಳೀಯ ಗ್ರಾಮ ಪಂಚಾಯತ್’ನಿಂದ ಪರವಾನಗಿ ಪಡೆಯದಿರುವುದು, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಿಂದ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವುದು ಮತ್ರು ಆ ಕಾರ್ಮಿಕರಿಗೆ ಸರಿಯಾದ ರೀತಿಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸದಿರುವುದು, ಯಾವುದೇ ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ನೋಂದಣಿಯಾಗದಿರುವುದು, ಕಾರ್ಮಿಕರಿಗೆ ಮೂಲಭೂತ ವ್ಯವಸ್ಥೆಗಳಿಲ್ಲದಿರುವುದು ಸೇರಿದಂತೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಮುಟ್ಟುಗೋಲು ಹಾಕಿಕೊಂಡು ಮಾಲಕತ್ರಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.



