ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ- ಕೇರಳ ಗಡಿಭಾಗವಾದ ಅಡೂರಿನಲ್ಲಿ ವಾಸಿಸಿದ್ದ, ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ರೇಶ್ಮಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಹೇಳಲಾಗಿದೆ.
ಅಡೂರು ಮೂಲದ ಅವರನ್ನು ʼಚಿನ್ನು ಪಾಪ್ಪುʼ ಎಂದು ಕರೆಯಲಾಗುತ್ತಿತ್ತು. ಅವರಿಗೆ 24 ವರ್ಷ ವಯಸ್ಸಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರು ಎರಡು ಲಕ್ಷಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದರು.
ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಮೂಲತಃ ಅವರು ಕೇರಳದ ಆಡೂರಿನವರಾಗಿದ್ದರೂ, ಕರ್ನಾಟಕದ ಗಡಿ ಭಾಗಕ್ಕೆ ಹೊಂದಿರುವ ಕನ್ನಡಿಗರೇ ಹೆಚ್ಚಿರುವ ಕೇರಳದ ಕಾಸರಗೋಡಿನ ಬಳಿಯ ಉಳಿಯತ್ತಡ್ಕದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಅವರ ಶವ ಕ್ವಾರ್ಟರ್ಸ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಚಿನ್ನು ಪಾಪು ಒಂದು ತಿಂಗಳ ಹಿಂದೆ ವಿಚ್ಛೇದನ ಪಡೆದಿದ್ದರು ಎನ್ನುವುದು ಗೊತ್ತಾಗಿದೆ. ಅವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಆತ್ಮಹತ್ಯೆಗೆ ವಿಚ್ಛೇದನಕ್ಕೆ ಸಂಬಂಧಿಸಿದ ಯಾವುದೇ ಕಾರಣವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.



