ಹೊಸದಿಗಂತ ಹುಬ್ಬಳ್ಳಿ:
“ರಾಜಕೀಯ ಕ್ಷೇತ್ರದಲ್ಲಿದ್ದ ಮೇಲೆ ರಾಜಕಾರಣ ಮಾಡುವುದು ಅನಿವಾರ್ಯ, ನಾವೇನು ಸನ್ಯಾಸಿಗಳಲ್ಲ. ಆದರೆ, ಅಭಿವೃದ್ಧಿ ಕೆಲಸಗಳ ವಿಷಯದಲ್ಲಿ ರಾಜಕೀಯ ಬೆರೆಸುವ ಪ್ರಮೇಯವೇ ನಮಗಿಲ್ಲ” ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ನೇರ ನುಡಿಗಳಲ್ಲಿ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಕಾರ್ಯವೈಖರಿ ಮತ್ತು ಪಕ್ಷದ ಆಂತರಿಕ ವಿಚಾರಗಳ ಕುರಿತು ಸ್ಪಷ್ಟನೆ ನೀಡಿದರು.
ರಾಜಕೀಯ ಅಖಾಡದಲ್ಲಿ ರಾಜಕೀಯ ಇದ್ದೇ ಇರುತ್ತದೆ. ಆದರೆ ಜನರ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಯಾವುದೇ ತಾರತಮ್ಯ ಮಾಡದೆ ಕೆಲಸ ಮಾಡುವುದು ನಮ್ಮ ಗುರಿ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಅಥವಾ ಗೊಂದಲಗಳಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಜನರ ಸೇವೆ ಮಾಡುತ್ತಿದ್ದೇವೆ. ಉಪ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಆಗಮಿಸುವ ಬಗ್ಗೆ ಕುತೂಹಲ ಬೇಡ, ಸಮಯ ಬಂದಾಗ ನೀವೇ ನೋಡುತ್ತೀರಿ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ರಾಜ್ಯ ಸರ್ಕಾರದ ‘ಸಾವಿರ ದಿನಗಳ ಸಾಧನೆ’ ಮತ್ತು ‘ಭೂ ಗ್ಯಾರಂಟಿ’ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದು ವಿರೋಧ ಪಕ್ಷಗಳಿಗೆ ತೋರಿಸುವ ಶಕ್ತಿ ಪ್ರದರ್ಶನವಲ್ಲ, ಬದಲಾಗಿ ಜನರಿಗೆ ನೀಡಿದ ಭರವಸೆ ಈಡೇರಿಸಿದ ಸಂಭ್ರಮ ಎಂದು ಸಚಿವರು ಸ್ಪಷ್ಟಪಡಿಸಿದರು.



