ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1,000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರದ ಭಾಷಣ ಮಾಡಿದರು. ತಮ್ಮ ಸರ್ಕಾರದ ಸಾಧನೆಗಳನ್ನು ಮೆಲುಕು ಹಾಕುತ್ತಲೇ ಪ್ರತಿಪಕ್ಷ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
“ಚುನಾವಣಾ ಪ್ರಣಾಳಿಕೆಯ 590 ಭರವಸೆಗಳಲ್ಲಿ ಈಗಾಗಲೇ 234 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮದು ಕೊಟ್ಟ ಮಾತು ಉಳಿಸಿಕೊಳ್ಳುವ ಬದ್ಧತೆಯ ಸರ್ಕಾರ” ಎಂದು ಸಿಎಂ ಹೆಮ್ಮೆಯಿಂದ ನುಡಿದರು.
“ಬಿಜೆಪಿ ಅಧಿಕಾರದಲ್ಲಿದ್ದಾಗ ಶೇ.10ರಷ್ಟು ಭರವಸೆಗಳನ್ನೂ ಈಡೇರಿಸಿರಲಿಲ್ಲ. ಈಗ ನಮ್ಮ ಮೇಲೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ” ಎಂದು ಟೀಕಿಸಿದರು.
ಜಿಎಸ್ಟಿ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸತತವಾಗಿ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಮೆಕ್ಕೆಜೋಳ ಖರೀದಿ ಕೇಂದ್ರ, ಕಬ್ಬಿಗೆ ಬೆಂಬಲ ಬೆಲೆ ಸೇರಿದಂತೆ ರೈತರು, ಹಿಂದುಳಿದವರು ಮತ್ತು ಬಡವರ ಏಳಿಗೆಗಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು.
“ಸರ್ಕಾರದ ಖಜಾನೆ ಖಾಲಿಯಾಗಿದೆ ಎನ್ನುವುದು ಸುಳ್ಳು. ಖಜಾನೆ ಖಾಲಿಯಾಗಿದ್ದರೆ ಇಷ್ಟೊಂದು ಜನಪದ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿರಲಿಲ್ಲ” ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.



