ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ದುಡಿಯುವ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಪ್ರಮುಖ ಯೋಜನೆಯಾದ ಇಂದಿರಾ ಕ್ಯಾಂಟೀನ್ಗಳ ಸೇವೆಯನ್ನು ಮತ್ತಷ್ಟು ಉತ್ತಮಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.
ಆಹಾರದ ಗುಣಮಟ್ಟ ಹೆಚ್ಚಿಸುವುದು, ಸ್ವಚ್ಛತೆಯನ್ನು ಕಾಪಾಡುವುದು ಹಾಗೂ ಜನರನ್ನು ಮತ್ತೆ ಕ್ಯಾಂಟೀನ್ಗಳತ್ತ ಆಕರ್ಷಿಸುವ ಉದ್ದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ತಿಳಿಸಿದ್ದಾರೆ.
ನಗರದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಟೀನ್ಗಳನ್ನು ಅಭಿವೃದ್ಧಿಪಡಿಸುವುದಕ್ಕೂ ಹಾಗೂ ಅಗತ್ಯವಿರುವ ಕಡೆ ಹೊಸ ಕೇಂದ್ರಗಳನ್ನು ಆರಂಭಿಸುವುದಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟ ಕುರಿತಾಗಿ ಕೆಲವು ದೂರಿಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ಮೆನು ರೂಪಿಸಿ, ಸೇವೆಯನ್ನು ಆಕರ್ಷಕವಾಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು. ಕಡಿಮೆ ದರದಲ್ಲಿ ಊಟ ಒದಗಿಸುವ ಈ ಯೋಜನೆ ದುಡಿಯುವ ವರ್ಗಕ್ಕೆ ಬಹಳ ಉಪಯುಕ್ತವಾಗಿದ್ದರೂ, ಜನರನ್ನು ಸೆಳೆಯುವತ್ತ ಹೆಚ್ಚಿನ ಗಮನ ಹರಿಸಬೇಕಿದೆ ಎಂದರು.
ಇದಲ್ಲದೆ, ನಗರದಲ್ಲಿ ಕಸದ ನಿರ್ವಹಣೆಯನ್ನು ಸುಧಾರಿಸಲು ಸಂಗ್ರಹಣೆ ಮತ್ತು ವಿಂಗಡಣೆಯನ್ನು ಒಂದೇ ಕೇಂದ್ರದಲ್ಲಿ ನಡೆಸುವ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಈಗಾಗಲೇ ಮೀಸಲಿಡಲಾಗಿದೆ ಎಂದು ತಿಳಿಸಿದರು.



