ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ಭರ್ಜರಿ ಕಾನೂನು ಜಯ ಸಿಕ್ಕಿದೆ. ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ಮಂಗಳವಾರ ರದ್ದುಗೊಳಿಸಿದೆ.
ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಕಾಂಗ್ರೆಸ್ ಪತ್ರಿಕೆಗಳಲ್ಲಿ ಜಾಹೀರಾತು ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಬಿಜೆಪಿ ಘಟಕವು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ದೂರು ದಾಖಲಿಸಿತ್ತು. ಈ ದೂರನ್ನು ವಜಾಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಈ ಕೆಳಗಿನ ತಾಂತ್ರಿಕ ಅಂಶಗಳನ್ನು ಗಮನಿಸಿ ಕೇಸ್ ರದ್ದುಪಡಿಸಿದೆ:
ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಅದರ ಗೌರವಕ್ಕೆ ಧಕ್ಕೆಯಾಗಿದ್ದರೆ ರಾಷ್ಟ್ರೀಯ ಮಟ್ಟದ ಅಧಿಕೃತ ಪ್ರತಿನಿಧಿಯೇ ದೂರು ನೀಡಬೇಕು.
ಈ ಪ್ರಕರಣದಲ್ಲಿ ರಾಜ್ಯ ಘಟಕದ ಅಧ್ಯಕ್ಷರು ಕಾರ್ಯದರ್ಶಿಗೆ ದೂರು ನೀಡಲು ಅಧಿಕಾರ ನೀಡಿದ್ದರು. ಆದರೆ, ರಾಷ್ಟ್ರೀಯ ಪಕ್ಷವೊಂದರ ಪರವಾಗಿ ದೂರು ನೀಡಲು ರಾಜ್ಯ ಘಟಕದ ಅಧ್ಯಕ್ಷರನ್ನು ‘ಸಕ್ಷಮ ಪ್ರತಿನಿಧಿ’ ಎಂದು ಪರಿಗಣಿಸಲು ಸಾಧ್ಯವಿಲ್ಲ.
ದೂರುದಾರರಿಗೆ ದೂರು ಸಲ್ಲಿಸುವ ಕಾನೂನಾತ್ಮಕ ಅರ್ಹತೆ ಇಲ್ಲದ ಕಾರಣ, ಈ ವಿಚಾರಣೆಯು ಅಮಾನ್ಯವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.



