ಹೊಸದಿಗಂತ ವರದಿ ಹುಬ್ಬಳ್ಳಿ:
ರಾಜ್ಯದ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ 37,000 ಕೋಟಿಯನ್ನು ಸರ್ಕಾರ ಏಕಕಂತಿನಲ್ಲಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾ. 6 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆವೊಂದರಲ್ಲಿ 1400 ಕೋಟಿ ಬಿಲ್ ಬಾಕಿ ಇದೆ. ಮೂರು ವರ್ಷಗಳಿಂದ ಕಾಮಗಾರಿ ನಡೆಸಿದ ಗುತ್ತಿಗೆದಾರರು ಚಿನ್ನಾಭರಣ, ಮನೆ, ಆಸ್ತಿಗಳನ್ನು ಅಡವಿಟ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಾಂತ ಕಾಮಗಾರಿಗಳ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದರು.
ಜಲ ಸಂಪನ್ಮೂಲ ಇಲಾಖೆಯಿಂದ 13,000 ಕೋಟಿ ರೂ., ಲೋಕೋಪಯೋಗಿ ಇಲಾಖೆ 8,370 ಗ್ರಾಮೀಣ ಅಭಿವೃದ್ಧಿ ಇಲಾಖೆ 3,800, ಸಣ್ಣ ನೀರಾವರಿ ಇಲಾಖೆ 3,000, ನಗರಾಭಿವೃದ್ಧಿ ಇಲಾಖೆ 2,000, ವಸತಿ ಮತ್ತು ವಕ್ ಇಲಾಖೆ 2,600, ಬಿಬಿಎಂಪಿ 1,600 ಹಾಗೂ ಕಾರ್ಮಿಕ ಇಲಾಖೆಯಿಂದ 2,000 ಕೋಟಿ ರೂ. ಬಾಕಿ ಇದೆ ಎಂದರು.



