ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರ ಮಕ್ಕಳಿಗೆ, ರೈತರಿಗೆ ಮದುವೆಯಾಗೋದಕ್ಕೆ ಹೆಣ್ಣು ಸಿಗುತ್ತಿಲ್ಲ. ಮದುವೆಯಾಗಿ ಹಳ್ಳಿಯಲ್ಲಿ ಇರಬೇಕು ಎನ್ನುವ ಕಾರಣಕ್ಕೋ, ಹಣವಿರೋದಿಲ್ಲ ಎನ್ನುವುದಕ್ಕೋ, ಕೆಲಸ ಹೆಚ್ಚು ಎಂದೋ ಹೆಣ್ಣುಮಕ್ಕಳು ರೈತರನ್ನು ವರಿಸೋದಕ್ಕೆ ಆಸಕ್ತಿ ತೋರುತ್ತಿಲ್ಲ.
ಈ ಬಗ್ಗೆ ಹಲವು ನಾಯಕರು ಈಗಾಗಲೇ ಧ್ವನಿ ಎತ್ತಿದ್ದಾರೆ. ಕಳೆದ ತಿಂಗಳು ಬೆಳಗಾವಿ ಸುವರ್ಣ ವಿಧಾನ ಸೌಧದದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಪುಟ್ಟಣ್ಣ ಈ ವಿಚಾರ ಪ್ರಸ್ತಾವಿಸಿ, ರಾಜ್ಯದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡುವವರೇ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಮಕ್ಕಳ ಖಾತೆಗೆ 10 ಲಕ್ಷ ರೂ. ಹಾಕಬೇಕು ಎಂದು ಆಗ್ರಹಿಸಿದ್ದರು.
ಇದೀಗ ತುಮಕೂರಿನ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೃಷಿಯಲ್ಲಿ ತೊಡಗಿರುವ ಗಂಡು ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಆಗ್ರಹಿಸಿದ್ದಾರೆ.
ಫೆಬ್ರವರಿ 18ರಂದು ಪತ್ರ ಬರೆದಿರುವ ಅವರು, ಯುವಕರ, ಕೃಷಿಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಯ ಬಗ್ಗೆ ಗಮನ ಸೆಳೆದಿದ್ದಾರೆ. ಸದ್ಯ ಅವರು ಬರೆದ ಈ ಪತ್ರ ಭಾರಿ ಚರ್ಚೆಗೆ ಕಾರಣವಾಗಿದೆ.



