ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆಯ ಬನ್ನಿಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗಲಿರುವ ‘ವೇದವಿದ್ಯಾ ವಿಹಾರ ಗುರುಕುಲ’ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಗುದ್ದಲಿಪೂಜೆ ಮತ್ತು ಹೋಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು, ವೇದ ಶಿಕ್ಷಣದ ಪುನರುತ್ಥಾನಕ್ಕೆ ನಾಂದಿ ಹಾಡಿದರು.
ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಮಹಿಳೆಯರಿಗೆ ಗುರುಕುಲದ ವತಿಯಿಂದ ಸೀರೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್, ಅವರ ಪತ್ನಿ ಅನುಸೂಯ ಮಂಜುನಾಥ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸಚಿವರಿಗೆ ಸಾಥ್ ನೀಡಿದರು.
ಕಾರ್ಯಕ್ರಮದ ಬಳಿಕ, ಬೆಂಗಳೂರು ಹೊರವಲಯದ STRR (ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ) ಯೋಜನೆಗಾಗಿ ಭೂಮಿ ನೀಡಿದ ರೈತರು ಸಚಿವರನ್ನು ಭೇಟಿ ಮಾಡಿದರು. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತಮಗೆ ಬರಬೇಕಾದ ಪರಿಹಾರ ವಿಳಂಬವಾಗುತ್ತಿರುವ ಬಗ್ಗೆ ಮನವಿ ಸಲ್ಲಿಸಿದರು. ರೈತರ ಅಹವಾಲನ್ನು ತಾಳ್ಮೆಯಿಂದ ಆಲಿಸಿದ ನಿರ್ಮಲಾ ಸೀತಾರಾಮನ್, ತಕ್ಷಣವೇ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಂದ ಯೋಜನೆಯ ಮಾಹಿತಿ ಪಡೆದರು ಹಾಗೂ ಅರ್ಹ ರೈತರಿಗೆ ಶೀಘ್ರವಾಗಿ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.



